ಹನೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಚಿಕ್ಕಲ್ಲೂರಿನಲ್ಲಿ ಐದು ದಿನಗಳ ಕಾಲ ನಡೆದ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಶಪಡಿಸಿಕೊಂಡಿದ್ದ ಪ್ರಾಣಿಗಳನ್ನು ಸಂಬಂಧಿಸಿದ ಮಾಲೀಕರಿಗೆ ಹಿಂದಿರುಗಿಸಲು ಮುಂದಾಗಿದೆ.
ಜಾತ್ರೆಗೆ ಪ್ರಾಣಿಗಳನ್ನು ತರದಂತೆ ತಡೆಯಲು ಐದು ಕಡೆ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ, ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಜಾತ್ರೆಗೆ ಬರುತ್ತಿದ್ದ ಪ್ರತಿ ವಾಹನವನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 19 ಮೇಕೆ ಹಾಗೂ 56 ಕೋಳಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಾತ್ರೆಯಲ್ಲಿ ಪಂಕ್ತಿಸೇವೆ ಹೆಸರಿನಲ್ಲಿ ವ್ಯಾಪಕ ಪ್ರಾಣಿ ಬಲಿ ನಡೆಯುತ್ತಿದೆ. ಇದನ್ನು ತಡೆಯಬೇಕು ಎಂದು ಒತ್ತಾಯಿಸಿ 2017ರಲ್ಲಿ ವಿಶ್ವ ಪ್ರಾಣಿ ದಯಾ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು. ಜಾತ್ರೆಯಲ್ಲಿ ಪ್ರಾಣಿಬಲಿ ತಡೆಗಟ್ಟುವಂತೆ ಹೈಕೋರ್ಟ್ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಅದರಂತೆ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಿದ್ದ ಜಿಲ್ಲಾಡಳಿತ, ಭಕ್ತರು ಕುರಿ, ಮೇಕೆ, ಕೋಳಿಗಳನ್ನು ತರದಂತೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿತ್ತು.
‘ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡ ಮೇಕೆ ಹಾಗೂ ಕೋಳಿಗಳನ್ನು ನಮ್ಮ ವಶಕ್ಕೆ ನೀಡಿದ್ದಾರೆ. ರೈತರೊಬ್ಬರ ಜಮೀನಿನಲ್ಲಿ ಶೆಡ್ ನಿರ್ಮಿಸಿ ಅವುಗಳನ್ನು ಆರೈಕೆ ಮಾಡಲಾಗುತ್ತಿದೆ. ಜಿಲ್ಲಾ ಡಳಿತ ನೀಡುವ ಆದೇಶದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ತಿಳಿಸಿದರು.
‘ವಶಕ್ಕೆ ಪಡೆದ ಪ್ರಾಣಿಗಳ ಮಾಲೀಕರ ಪಟ್ಟಿ ತಯಾರಿಸಲಾಗಿದೆ. ಇನ್ನೆರಡು ದಿನದಲ್ಲಿ ಮಾಲೀಕರನ್ನು ಸಂಪರ್ಕಿಸಿ ಅವುಗಳನ್ನು ಹಿಂದಿರು ಗಿಸಲಾಗುವುದು’ ಎಂದು ಉಪವಿಭಾ ಗಾಧಿಕಾರಿ ಬಿ. ಫೌಜಿಯಾ ತರನ್ನುಮ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.