ADVERTISEMENT

ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ 13ರಂದು

​ಪ್ರಜಾವಾಣಿ ವಾರ್ತೆ
Published 12 ಮೇ 2019, 12:59 IST
Last Updated 12 ಮೇ 2019, 12:59 IST

ಚಾಮರಾಜನಗರ: ಕೃಷಿಯನ್ನು ಹೆಚ್ಚು ಲಾಭದಾಯಕವನ್ನಾಗಿ ಮಾಡಲು ಮತ್ತು ಜನರಿಗೆ ಆಹಾರ ಭದ್ರತೆ ಒದಗಿಸಲು ಲಭ್ಯವಿರುವ ಜಮೀನುಗಳಲ್ಲಿ ಗರಿಷ್ಠ ಕೃಷಿ ಉತ್ಪಾದನೆ ಮಾಡುವ ಸಲುವಾಗಿ ರೈತರಲ್ಲಿ ಜಾಗೃತಿ ಮೂಡಿಸುವ ಪ್ರಸಕ್ತ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಸೋಮವಾರ ಚಾಲನೆ ಸಿಗಲಿದೆ.

ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಅವರು ಸೋಮವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಸೇರಿದಂತೆ ಹಲವು ಇಲಾಖೆಗಳ ಸಮನ್ವಯದೊಂದಿಗೆ ಈ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಚಾಮರಾಜನಗರ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಹೋಬಳಿಗಳಲ್ಲಿ ಪ್ರಚಾರ: ಅಭಿಯಾನದ ಭಾಗವಾಗಿ ತಾಲ್ಲೂಕಿನ ಐದು ಹೋಬಳಿಗಳಲ್ಲಿ ತಲಾ ಎರಡು ದಿನಗಳ ಪ್ರಚಾರ ಕಾರ್ಯ ನಡೆಯಲಿದೆ.

13 ಮತ್ತು 14ರಂದು ಸಂತೇಮರಹಳ್ಳಿ ಹೋಬಳಿ, 15, 16ರಂದು ಹರದನಹಳ್ಳಿ, ಚಂದಕವಾಡಿಯಲ್ಲಿ 17 ಮತ್ತು 18ರಂದು, ಕಸಬಾ ಹೋಬಳಿಯಲ್ಲಿ 19 ಮತ್ತು 20ರಂದು ಹಾಗೂ 21 ಮತ್ತು 22ರಂದು ಹರವೆ ಹೋಬಳಿಯಲ್ಲಿ ಅಭಿಯಾನ ನಡೆಯಲಿದೆ. ಕಸಬಾ ಬಿಟ್ಟು ಉಳಿದ ಎಲ್ಲ ಕಡೆಗಳಲ್ಲಿ ಆಯಾ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಸಬಾದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.