ADVERTISEMENT

ಚಾಮರಾಜನಗರ | ಗಟ್ಟಿ ಭಾರತಕ್ಕೆ ವಿಶ್ವ ಮಟ್ಟದ ಗೌರವ...

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದಲ್ಲಿ ಜಿ.ಆರ್‌.ಜಗದೀಶ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 16:19 IST
Last Updated 25 ಜೂನ್ 2022, 16:19 IST
‘ಅಮೃತ ಭಾರತಿಗೆ ಕನ್ನಡ ಆರತಿ’ ಕಾರ್ಯಕ್ರಮದ ಅಂಗವಾಗಿ ಚಾಮರಾಜನಗರದಲ್ಲಿ ಶನಿವಾರ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು
‘ಅಮೃತ ಭಾರತಿಗೆ ಕನ್ನಡ ಆರತಿ’ ಕಾರ್ಯಕ್ರಮದ ಅಂಗವಾಗಿ ಚಾಮರಾಜನಗರದಲ್ಲಿ ಶನಿವಾರ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು   

ಚಾಮರಾಜನಗರ:ಭಾರತದ ಮೇಲೆ ಪರಕೀಯರು ನಿರಂತರ ದಾಳಿ ನಡೆಸಿದ್ದರೂ, ಭಾರತ ಈಗಲೂ ಭಾರತವಾಗಿ ಗಟ್ಟಿಯಾಗಿ ಉಳಿದಿದೆ. ದೇಶಕ್ಕೆ ವಿಶ್ವಮಟ್ಟದಲ್ಲಿ ಗೌರವದ ಸ್ಥಾನವಿದೆ ಎಂದು ಬೆಂಗಳೂರಿನ ವಿದ್ಯಭಾರತಿಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಿ.ಆರ್.ಜಗದೀಶ್‌ ಅವರು ಶನಿವಾರ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಮೃತ ಭಾರತಿ ಎಂದರೇ ಭಾರತಕ್ಕೆ ಸಾವಿಲ್ಲ ಎಂದರ್ಥ. ಪ್ರಪಂಚದ ಅನೇಕ ದೇಶಗಳು ಇತರೆ ದೇಶಗಳ ಒಂದೇ ದಾಳಿಗೆ ದ್ವಂಸಗೊಂಡಿದ್ದವು. ಆದರೆ, ಭಾರತ ಹೊರಗಿನಿವರಿಂದ ಹಲವು ದಾಳಿಗಳನ್ನು ಎದುರಿಸಿತ್ತು.ಭಾರತದ್ದು ಸಂಘರ್ಷಮಯ ಇತಿಹಾಸ.ಸ್ವಾತಂತ್ರ್ಯ ಹೋರಾಟದ ಪ್ರತಿಯೊಂದು ಕಾಲಘಟ್ಟವೂ ರೋಚಕವಾಗಿದೆ. ಸ್ವಾತಂತ್ರ್ಯವೆನ್ನುವುದು ಸಾರಾಸಗಟಾಗಿ ಸಿಕ್ಕಿಲ್ಲ. ಅದಕ್ಕಾಗಿ ಸಾಕಷ್ಟು ವೀರಯೋಧರು, ದೇಶಪ್ರೇಮಿಗಳು ತ್ಯಾಗ ಮಾಡಿದ್ದಾರೆ.ಗಾಂಧೀಜೀಜಿ ಅವರು ಅಹಿಂಸಾತ್ಮಕ ಚಳವಳಿ ಮೂಲಕ ದೇಶದ ಮೂಲೆಮೂಲೆಗಳಲ್ಲೂ ಸ್ವಾತಂತ್ರ್ಯದ ಕಿಡಿ ಹಚ್ಚಿದ್ದರು. ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್, ಅಜಾದ್ ಸೇರಿದಂತೆ ಇನ್ನಿತರೆ ಕ್ರಾಂತಿಕಾರಿಗಳ ಹೋರಾಟವು ದೇಶದ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆಯಿತು’ ಎಂದರು.

ADVERTISEMENT

ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕೆ ಕರ್ನಾಟಕ ಹಾಗೂ ಜಿಲ್ಲೆಯ ಕೊಡುಗೆ ಅಪಾರ. ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ. ‘ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಅಮೃತ ಮಹೋತ್ಸವ ಆಚರಣೆಯು ದೇಶದ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಲು ಅವಶ್ಯಕ. ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯಬೇಕು’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ,ಕರ್ನಾಟಕ ಜಾನಪದ ಅಕಾಡಮಿ ಸದಸ್ಯ ಸಿ.ಎಂ. ನರಸಿಂಹಮೂರ್ತಿ ಅವರು ಮಾತನಾಡಿದರು.

ನಗರಸಭೆ ಸದಸ್ಯರಾದ ಗಾಯತ್ರಿ ಚಂದ್ರಶೇಖರ್, ಭಾಗ್ಯಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ನಗರಸಭೆ ಆಯುಕ್ತ ಕರಿಬಸವಯ್ಯ, ನಾಮನಿರ್ದೇಶಿತ ಸದಸ್ಯರಾದ ಚಂದ್ರು, ತಹಶೀಲ್ದಾರ್ ಬಸವರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್, ಮೈಸೂರು ವಿ.ವಿ.ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್, ಕಾರ್ಯಕ್ರಮ ಸಂಯೋಜಕರಾದ ಅಶ್ವಿನ್, ಇತರರು ಇದ್ದರು.

ಈ ಸಂದರ್ಭದಲ್ಲಿ ಎನ್.ಸುಂದ್ರೇಶ್ ಅವರು ರಚಿಸಿರುವ ‘ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ’ ಪುಸ್ತಕ ಬಿಡುಗಡೆ ಮಾಡಲಾಯಿತು.

ಅದ್ದೂರಿ ಮೆರವಣಿಗೆ
ಅಮೃತ ಭಾರತಿಗೆ ಕನ್ನಡದ ಆರತಿ ಅಂಗವಾಗಿ ನಗರದಲ್ಲಿ ಶನಿವಾರ ಅದ್ದೂರಿ ಮೆರವಣಿಗೆ ನಡೆಯಿತು.

ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ನಗರಸಭಾ ಅಧ್ಯಕ್ಷೆ ಆಶಾ, ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮೆರವಣಿಗೆಗೆ ಹಸಿರು ನಿಶಾನ ತೋರಿದರು.

ವೀರಗಾಸೆ, ಡೊಳ್ಳುಕುಣಿತ, ನಾದಸ್ವರ, ಬ್ಯಾಂಡ್‌ಸೆಟ್, ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ್ದ ಮಕ್ಕಳು, ಶಾಲಾಮಕ್ಕಳು, ವಿವಿಧ ಸ್ತ್ರೀಶಕ್ತಿ ಸಂಘದ ಸದಸ್ಯರು, ಸಂಘಸಂಸ್ಥೆಗಳು ಪ್ರತಿನಿಧಿಗಳು ಭಾಗವಹಿಸಿದ್ದರು.

ದೇವಸ್ಥಾನದಿಂದ ಹೊರಟ ಮೆರವಣಿಗೆ ಭುವನೇಶ್ವರಿ ವೃತ್ತ, ಕೆಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ದೇವಾಂಗ ಬೀದಿ, ಮಹಾವೀರ ವೃತ್ತದ ಮೂಲಕ ಮಾರಿಗುಡಿಯ ಮುಂಭಾಗದ ಆವರಣಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.