
ಚಾಮರಾಜನಗರ: ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳುವ ಕರ್ನಾಟಕದ ಭಕ್ತರ ಮೇಲೆ ತಮಿಳುನಾಡಿನಲ್ಲಿ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ.
ಬುಧವಾರ ನಗರದ ಚಾಮರಾಜೇಶ್ವರ ಉದ್ಯಾನದಲ್ಲಿ ಭುವನೇಶ್ವರಿ ಪ್ರತಿಮೆ ಎದುರು ಮಾಧ್ಯಮಗಳ ಜೊತೆ ಮಾತನಾಡಿದ ಕನ್ನಡಪರ ಹೋರಾಟಗಾರ ಚಾರಂ ಶ್ರೀನಿವಾಸ ಗೌಡ, ಮಂಗಳವಾರ ತಮಿಳುನಾಡಿನ ತೂತುಕುಡಿಯಲ್ಲಿ ಕರ್ನಾಟಕದ ಶಬರಿಮಲೆ ಯಾತ್ರಾರ್ಥಿಗಳ ವಾಹನವನ್ನು ತಡೆದು ಕನ್ನಡ ಬಾವುಟವನ್ನು ಕಿತ್ತುಹಾಕಿ ಹಲ್ಲೆ ನಡೆಸಿದ್ದಾರೆ. ತಮಿಳುನಾಡಿನ ಗೂಂಡಾಗಳು ಆಗಾಗ ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವುದು ಖಂಡನೀಯ ಎಂದರು.
ತಮಿಳು ಗೂಂಡಾಗಳು ಕನ್ನಡಿಗರ ಹಲ್ಲೆ ನಡೆಸಿದರೂ ಅಲ್ಲಿನ ಪೊಲೀಸರು ಕಾನೂನು ಕ್ರಮ ಜರುಗಿಸಿಲ್ಲ. ಕೂಡಲೇ ತಮಿಳುನಾಡು ಸರ್ಕಾರ ಮಧ್ಯೆ ಪ್ರವೇಶಿಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಚಾಮರಾಜನಗರ ತಾಲ್ಲೂಕಿನ ಪುಣಜನೂರು ಗಡಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕನ್ನಡ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿನ ಜೊತೆಗೆ ಮಾತುಕತೆ ನಡೆಸದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಎರಡು ರಾಜ್ಯಗಳ ನಡುವಿನ ಸಾಮರಸ್ಯ ಕಾಪಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಬೇಕು ಎಂದು ಚಾರಂ ಶ್ರೀನಿವಾಸ ಗೌಡ ಒತ್ತಾಯಿಸಿದರು.
ಇದೇವೇಳೆ ಕನ್ನಡಗಿರ ಮೇಲಿನ ಹಲ್ಲೆ ಖಂಡಿಸಿ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು ಅಸಮಾಧಾನ ವ್ಯಕ್ತಪಡಿಸಿದರು. ಅಮಚವಾಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹೇಂದ್ರ, ಪಣ್ಯದಹುಂಡಿ ರಾಜು, ಮುಖಂಡ ಚಂದ್ರು ನಾಯಕ್, ರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.