ADVERTISEMENT

ಏಡ್ಸ್ ನಿಯಂತ್ರಣಕ್ಕೆ ಜಾಗೃತಿಯೇ ಮದ್ದು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2024, 15:23 IST
Last Updated 4 ಡಿಸೆಂಬರ್ 2024, 15:23 IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಚಾಲನೆ ನೀಡಿದರು
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಚಾಲನೆ ನೀಡಿದರು   

ಚಾಮರಾಜನಗರ: ಎಚ್‌ಐವಿ ಸೋಂಕಿತರನ್ನು ಸಮಾಜ ತಾರತಮ್ಯದಿಂದ ನೋಡುತ್ತಿದ್ದು, ಅವರನ್ನೂ ಮನುಷ್ಯರಂತೆ ಕಾಣಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚೈತನ್ಯ ನೆಟ್‌ವರ್ಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಏಡ್ಸ್‌ ರೋಗ ಹರಡುವಿಕೆಯ ಬಗ್ಗೆ ಅರಿವಿನ ಕೊರತೆಯಿಂದ ಸೋಂಕು ಹೆಚ್ಚಾಗುತ್ತಿದೆ. ಎಚ್‌ಐವಿ ಮಾರಕ ಕಾಯಿಲೆಯಾಗಿದ್ದು ಅಸುರಕ್ಷಿತ ಲೈಂಗಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಕೆಲವು ಸಂದರ್ಭಗಳಲ್ಲಿ ಅರಿವಿಲ್ಲದೆ ಎಚ್‌ಐವಿ ಸೋಂಕು ಹರಡುವ ಅಪಾಯ ಇರುತ್ತದೆ. ‌ಎಚ್.ಐ.ವಿ ಹಡುವಿಕೆ, ಅಪಾಯಗಳ ಬಗ್ಗೆ ಯುವ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಅರಿವು ಕಾರ್ಯಕ್ರಮಗಳು ಹೆಚ್ಚಾದರೆ ಏಡ್ಸ್‌ನಿಂದ ದೂರವಿರಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ಭಾರತಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎಸ್ ಗುರುಪ್ರಸಾದ್ ಮಾತನಾಡಿ ಎಚ್.ಐ.ವಿ ಸೋಂಕಿನ ಬಗ್ಗೆ ಸಮಾಜದಲ್ಲಿ ಮುಕ್ತವಾಗಿ ಮಾತನಾಡಲು ಹಿಂಜರಿಕೆ ಇದೆ. ಸಂಕೋಚ ಬಿಟ್ಟು ಏಡ್ಸ್‌ ತಡೆಗಟ್ಟುವಿಕೆ ಹಾಗೂ ಸುರಕ್ಷಿತ ಲೈಂಗಕತೆಯ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಬೀದಿ ನಾಟಕ ಸೇರಿದಂತೆ ಇನ್ನಿತರ ಜಾಗೃತಿ ಕಾರ್ಯಕ್ರಮಗಳ ಮೂಲಕ ಏಡ್ಸ್‌ ದುಷ್ಪರಿಣಾಮಗಳ ವಿರುದ್ಧ ಅರಿವು ಮೂಡಿಸಬೇಕು ಎಂದರು.

ಸಮತಾ ಸೊಸೈಟಿಯ ದೀಪ ಬುದ್ದೆ ಮಾತನಾಡಿ ‘ಸಂಸ್ಥೆಯಿಂದ ಎಚ್.ಐ.ವಿ ವಿರುದ್ದ ನಿರಂತರವಾಗಿ ಅರಿವು ಮೂಡಿಸಲಾಗುತ್ತಿದೆ. ಒಬ್ಬರಿಗೆ ಬಳಸಿದ ಸಿರಿಂಜ್‌ಗಳನ್ನು ಮತ್ತೊಬ್ಬರಿಗೆ ಬಳಸದಂತೆ ಎಚ್ಚರ ವಹಿಸಬೇಕು. ಜಾಗೃತಿಯಿಂದ ಮಾತ್ರ ಎಚ್.ಐ.ವಿ ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಮಾಜ ಮತ್ತಷ್ಟು ಹೆಚ್ಚು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಏಡ್ಸ್ ತಡೆ ಜಾಗೃತಿ ಜಾಥಾ ಉದ್ಘಾಟಿಸಿದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್‌ ಮಾತನಾಡಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಏಡ್ಸ್ ಹರಡುತ್ತದೆ. ಎಚ್‌ಐವಿ ಬಗ್ಗೆ ಹೆಚ್ಚು ಎಚ್ಚರಿಕೆ ಇರಬೇಕು, ಆರೋಗ್ಯಕರ ಜೀವನಕ್ಕಾಗಿ ವಿಶೇಷ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್ ರವಿಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಪ್ರೊ.ಶಿವಸ್ವಾಮಿ, ಚೈತನ್ಯ ನೆಟ್‌ವರ್ಕ್ ಸಂಸ್ಥೆಯ ಭಾಗ್ಯಮ್ಮ, ಸ್ನೇಹ ಜ್ಯೋತಿ ಸಂಸ್ಥೆಯ ಚಂದ್ರಶೇಖರ ಪಾಟೀಲ್ ಕಾರ್ಯಕ್ರಮದಲ್ಲಿ ಇದ್ದರು.

ಜಾಥಾದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಶ್ರೀಪತಿ, ಡಿಎಚ್‌ಒ ಡಾ.ಎಸ್.ಚಿದಂಬರ ಹಾಗೂ ಇತರ ಅಧಿಕಾರಿಗಳು ಇದ್ದರು.

ವಿಶ್ವ ಏಡ್ಸ್ ದಿನದ ಅಂಗವಾಗಿ ಬುಧವಾರ ರಾತ್ರಿ ಜಿಲ್ಲಾಡಳಿತ ಭವನದ ಮುಂಭಾಗ ಮೊಂಬತ್ತಿ ಬೆಳಗಿ ಜಾಗೃತಿ ಮೆರವಣಿಗೆ ನಡೆಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.