ಚಾಮರಾಜನಗರ: ಜಿಲ್ಲೆಯಾದ್ಯಂತ ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು (ಈದ್ –ಉಲ್–ಅದ್ಹಾ) ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ತುಂತುರು ಮಳೆಯ ಕಾರಣಕ್ಕೆ ಚಾಮರಾಜನಗರ ಸೇರಿದಂತೆ ಹಲವು ಕಡೆಗಳಲ್ಲಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮಸೀದಿಗಳಲ್ಲಿ ಒಟ್ಟಾಗಿ ಪ್ರಾರ್ಥನೆ ಸಲ್ಲಿಸಿದರು.
ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಈ ಹಬ್ಬದ ಆಚರಣೆ ಮನೆಗಳಿಗಷ್ಟೇ ಸೀಮಿತವಾಗಿತ್ತು. ಈ ಬಾರಿ ಯಾವುದೇ ನಿರ್ಬಂಧ ಇಲ್ಲದಿರುವುದರಿಂದ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದ್ದರು. ತುಂತುರು ಮಳೆ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಿಲ್ಲ.
ನಗರದಲ್ಲಿ ಜಿಲ್ಲಾ ಕ್ರೀಡಾಂಗಣದ ಪಕ್ಕ ಇರುವ ಮೈದಾನ ಹಾಗೂ ಸೋಮವಾರಪೇಟೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಮ್ಮಿಕೊಳ್ಳಲು ಮುಖಂಡರು ನಿರ್ಧರಿಸಿದ್ದರು. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕ್ರೀಡಾಂಗಣದ ಪಕ್ಕ ಇರುವ ಮೈದಾನವನ್ನು ಬಿಟ್ಟು ಸೋಮವಾರ ಪೇಟೆ ಮೈದಾನದಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸಲು ತೀರ್ಮಾನಿಸಲಾಗಿತ್ತು. ಕೊನೆ ಕ್ಷಣದಲ್ಲಿ ಮಳೆಯಿಂದಾಗಿ ಅಲ್ಲಿಯೂ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಸಾಮಾನ್ಯವಾಗಿ ಇಲ್ಲಿ ನಡೆಯುವ ಪ್ರಾರ್ಥನೆಯಲ್ಲಿ ಮಹಿಳೆಯರೂ ಪಾಲ್ಗೊಳ್ಳುತ್ತಾರೆ. ಆದರೆ, ಭಾನುವಾರ ಇದಕ್ಕೆ ಅವಕಾಶ ಇಲ್ಲದಿರುವುದರಿಂದ ಮಹಿಳೆಯರು ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸಿದರು.
ಹಬ್ಬದ ಅಂಗವಾಗಿ ಹೊಸ ಬಟ್ಟೆಗಳನ್ನು ಧರಿಸಿದ್ದ ಮಕ್ಕಳು ಹಾಗೂ ಪುರುಷರು, ಸಿಹಿಯನ್ನು ಸವಿದು ಮಸೀದಿಗಳಲ್ಲಿ ಇಸ್ಲಾಂನ ಘೋಷ ವಾಕ್ಯವನ್ನು ಪಠಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.ಧರ್ಮ ಗುರುಗಳು ಹಬ್ಬದ ಸಂದೇಶ ನೀಡಿದರು.
ಮನೆಗಳಲ್ಲಿ ಹಬ್ಬದ ಅಂಗವಾಗಿ ಮಾಂಸದ ಅಡುಗೆ ಸಿದ್ಧಪಡಿಸಿ, ಸ್ನೇಹಿತರು, ನೆಂಟರಿಷ್ಟರನ್ನು ಆಹ್ವಾನಿಸಿ ಜೊತೆಯಾಗಿ ಮಧ್ಯಾಹ್ನದ ಭೋಜನ ಸವಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.