
ಚಾಮರಾಜನಗರ: ಬಂಡೀಪುರ ರಕ್ಷಿತಾರಣ್ಯದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಕಾರಿನಲ್ಲಿ ಸಂಚರಿಸುತ್ತಿರುವ ವಿಡಿಯೊವೊಂದನ್ನು ‘ಆಲ್ಟ್ ನ್ಯೂಸ್’ ಸಂಸ್ಥಾಪಕ ಮಹಮ್ಮದ್ ಜುಬೇರ್ ‘ಎಕ್ಸ್’ನಲ್ಲಿ ಹಂಚಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
‘ಬಂಡೀಪುರ’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿರುವ ವಿಡಿಯೊಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದು, ‘ಬಂಡೀಪುರ ಅರಣ್ಯದೊಳಗೆ ರಾತ್ರಿ ವಾಹನಗಳ ಸಂಚಾರ ನಿರ್ಬಂಧವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದೆಯೇ’ ಎಂದು ಪ್ರಶ್ನಿಸಿದ್ದಾರೆ.
‘ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ, ಹಾಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಒತ್ತಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಣಿದಿದ್ದಾರೆಯೇ? ರಾತ್ರಿ ಸಂಚಾರಕ್ಕೆ ಮಹಮ್ಮದ್ ಜುಬೇರ್ ಅವರಿಗೆ ವಿಶೇಷ ಅನುಮತಿ ನೀಡಲಾಗಿದೆಯೇ?’ ಎಂದು ಕೇಳಿದ್ದಾರೆ.
‘ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿರ್ಬಂಧವಿದ್ದರೂ ಮಹಮ್ಮದ್ ವಾಹನ ಪ್ರವೇಶಕ್ಕೆ ಹೇಗೆ ಅನುಮತಿ ನೀಡಲಾಯಿತು? ನಿಯಮಬಾಹಿರವಾಗಿ ಸಂಚರಿಸಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ: ‘ಬಂಡೀಪುರ ಅರಣ್ಯದೊಳಗೆ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ನಿಷೇಧದ ಅವಧಿಯಲ್ಲಿ ಚೆಕ್ಪೋಸ್ಟ್ ದಾಟಿ ವಾಹನಗಳು ಪ್ರವೇಶಿಸುವುದು ಸಾಧ್ಯವಿಲ್ಲ. ನಿಯಮ ಉಲ್ಲಂಘಿಸಿರುವ ಬಗ್ಗೆ ಪುರಾವೆ ನೀಡಿದರೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ನಿರ್ದೇಶಕ ಪ್ರಭಾಕರನ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.