ಚಾಮರಾಜನಗರ:ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಾಗೂ ಅಖಿಲ ಭಾರತ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ನಗರದಲ್ಲಿ ಬೈಕ್ ಜಾಥಾ ನಡೆಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡ ಜಾಥಾವು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ, ನ್ಯಾಯಾಲಯದ ರಸ್ತೆ ಮೂಲಕ ಸಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮುಕ್ತಾಯಗೊಂಡಿತು.
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್ಪುರಿ ಸ್ವತಃ ಬೈಕ್ ಚಲಾಯಿಸಿ ಗಮನ ಸೆಳೆದರು.
ಜಾಥಾ ಆರಂಭಕ್ಕೂ ಮುನ್ನ ಮಾತನಾಡಿದ ಅವರು, ‘ದೇಶದ ಪ್ರತಿಯೊಬ್ಬ ಪ್ರಜೆಯೂ ಕಾನೂನಿನ ಬಗ್ಗೆ ಅರಿವು ಹೊಂದಿ ಅದನ್ನು ಪಾಲನೆ ಮಾಡಬೇಕು, ಗೌರವಿಸಬೇಕು’ ಎಂದು ತಿಳಿಸಿದರು.
‘ಕಾನೂನು ಸೇವಾ ಪ್ರಾಧಿಕಾರದ ಆದೇಶದಂತೆ ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲೂ ಜನರಿಗೆ ಕಾನೂನು ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಜಿಲ್ಲೆಯ 507 ಹಳ್ಳಿಗಳಲ್ಲೂ ಹಲವು ಕಾರ್ಯಕ್ರಮಗಳ ಮೂಲಕ ಜನರಿಗೆ ಕಾನೂನುಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜನರಲ್ಲಿ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ‘ಜನ ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದರಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಲಿದೆ ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನರು ಪರಸ್ಪರ ಅನ್ಯೋನ್ಯತೆಯಿಂದ ಬದುಕಲು ಕಾನೂನು ಅರಿವು ಅಗತ್ಯ’ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ್, ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಸೇರಿದಂತೆ ವಕೀಲರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.