ಚಾಮರಾಜನಗರ: ನಟ ಕಮಲ್ ಹಾಸನ್ ಕನ್ನಡ ಭಾಷೆಯ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪೊರಕೆ ಚಳವಳಿ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದ ಕಾರ್ಯಕರ್ತರು ನಟ ಕಮಲ್ ಹಾಸನ್ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಪರಂಪರೆ, ಸ್ವತಂತ್ರ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಕನ್ನಡ ಭಾಷೆಯನ್ನು ಅವಹೇಳನ ಮಾಡಿರುವುದು ಖಂಡನೀಯ. ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ಅಸಂಬದ್ಧವಾಗಿದ್ದು ಕೋಟ್ಯಂತರ ಕನ್ನಡಿಗರಿಗೆ ಅವಮಾನ ಮಾಡಿದಂತಾಗಿದೆ. ನಟಕ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ನಟ ಕಮಲ್ ಹಾಸನ್ಗೆ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯ ಅರಿವಿಲ್ಲ; ಕನ್ನಡ ವಿರೋಧಿ ಹೇಳಿಕೆ ನೀಡಿಯೂ ಕ್ಷಮೆ ಕೇಳದೆ ಉದ್ಧಟತನ ಮೆರೆಯುತ್ತಿರುವ ಕಮಲ್ ಹಾಸನ್ ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿದೆ. ಕಮಲ್ ಚಿತ್ರಗಳು ಕರ್ನಾಟಕದಲ್ಲಿ ಪ್ರದರ್ಶನವಾಗಲು ಅವಕಾಶ ನೀಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಿಜಧ್ವನಿ ಗೋವಿಂದ್, ಸಿ.ಎಂ.ಕೃಷ್ಣಮೂರ್ತಿ, ಮಹೇಶ್ ಗೌಡ, ಪಣ್ಯದಹುಂಡಿ ರಾಜು, ಅಜಯ್, ಡಾ.ಪರಮೇಶ್ವರಪ್ಪ, ಸುರೇಶ್ ಗೌಡ, ರೈತ ಸಂಘದ ನಾಗರಾಜು, ಅರುಣ್ ಕುಮಾರ್ ಗೌಡ, ತಾಂಡವಮೂರ್ತಿ, ವೀರಭದ್ರ, ರಾಚಪ್ಪ, ಲಿಂಗರಾಜು, ರಮೇಶ್ ಗೌಡ, ಸಿದ್ದಪ್ಪ, ಸುರೇಶ್, ನಂಜುಂಡ, ಶಿವು, ಡ್ಯಾನ್ಸ್ ಬಸವರಾಜು, ಪ್ರಕಾಶ್, ಚಂದ್ರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.