ADVERTISEMENT

ಭಾಗ್ಯಜ್ಯೋತಿ ವಿದ್ಯುತ್‌ ಶುಲ್ಕ ಮನ್ನಾಗೆ ಬಿಎಸ್‌ಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 15:22 IST
Last Updated 13 ಜನವರಿ 2020, 15:22 IST
ಭಾಗ್ಯಜ್ಯೋತಿ ಯೋಜನೆಯ ಫಲಾನುಭವಿಗಳ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಮನವಿ ಸಲ್ಲಿಸಿದರು
ಭಾಗ್ಯಜ್ಯೋತಿ ಯೋಜನೆಯ ಫಲಾನುಭವಿಗಳ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಮನವಿ ಸಲ್ಲಿಸಿದರು   

ಚಾಮರಾಜನಗರ: ಭಾಗ್ಯಜ್ಯೋತಿ ಯೋಜನೆಯ ಫಲಾನುಭವಿಗಳ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ಜಿಲ್ಲಾ ಘಟಕದಿಂದಪ್ರತಿಭಟನೆ ನಡೆಯಿತು.

ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟ ಕಾರ್ಯಕರ್ತರುಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಮಾರ್ಗವಾಗಿಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರಿಗೆ ಮನವಿ ಸಲ್ಲಿಸಿದರು.

25 ವರ್ಷಗಳಿಂದಲೂಕಟ್ಟಬೇಕು ಎನ್ನಲಾಗಿರುವ ವಿದ್ಯುತ್ ಶುಲ್ಕವನ್ನು ಪಾವತಿಸುವಂತೆ ಸೆಸ್ಕ್‌ವತಿಯಿಂದ ಯಾವುದೇ ಬಿಲ್ ಅಥವಾ ನೋಟೀಸ್ ನೀಡದೆ ಈಗ ಏಕಾಏಕಿ ಫಲಾನುಭವಿಗಳಿಗೆ₹ 10 ಸಾವಿರದಿಂದ₹ 45 ಸಾವಿರ ವರಗೆ ವಿದ್ಯುತ್‌ಶುಲ್ಕಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ.

ADVERTISEMENT

ಕಟ್ಟದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಸರ್ಕಾರ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಅಶಕ್ತರಾದ ಬಡವರಿಗೆ ಉಚಿತವಾಗಿ ಈ ಯೋಜನೆಯ ಮೂಲಕ40 ಯುನಿಟ್‌ಗಳನ್ನು ಉಚಿತವಾಗಿ ನೀಡುವ ಅವಕಾಶ ಕಲ್ಪಿಸಿದೆ.

ಈ ಯೋಜನೆ ಫಲಾನುಭವಿಗಳು40ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತವಾಗಿ ನೀಡಿರುವ40ಯೂನಿಟ್ ಮತ್ತು ಹೆಚ್ಚುವರಿ ಯೂನಿಟ್ ಸೇರಿಸಿ ಬಿಲ್ ಹಾಕುತ್ತಾರೆ ಇದು ನಿಗಮದ ಅವೈಜ್ಞಾನಿಕ ತೀರ್ಮಾನವಾಗಿದೆ. ಯೋಜನೆ ಉದ್ದೇಶ ಸಂಪೂರ್ಣವಾಗಿ ವಿಫಲವಾಗಿದ್ದು, ಬಡವರಿಗೆ ತುಂಬಾ ಅನ್ಯಾಯವಾಗುತ್ತಿದೆ ಎಂದು ಕಾರ್ಯಕರ್ತರು ದೂರಿದರು.

ಜೀತ ವಿಮುಕ್ತರಿಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಿ ಆದೇಶ ನೀಡಿದ್ದರೂ ಅವರ ವಶಕ್ಕೆ ಭೂಮಿಯನ್ನೇ ನೀಡಿಲ್ಲ. ಇವರಿಗೆ ಕೂಡಲೇ ಹಕ್ಕುಪತ್ರ, ಭೂಮಿಯನ್ನು ನೀಡಬೇಕು. ಭಾಗ್ಯಜ್ಯೋತಿ ಯೋಜನೆಯಲ್ಲಿ ನೀಡುವ40ಯೂನಿಟ್‌ಗಳನ್ನು100ಯೂನಿಟ್‌ಗಳಿಗೆ ಹೆಚ್ಚಿಸಿ ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ವಿಧಿಸಬೇಕು. ಇ–ಸ್ವತ್ತು ನೀಡುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು.

ವಿವಿಧ ಇಲಾಖೆಗಳಲ್ಲಿ ನೀಡುವ ಸಾಲಗಳು ಬ್ಯಾಂಕ್‌ನಲ್ಲಿ ಶೀಘ್ರದಲ್ಲೇ ದೊರೆಯುವಂತೆ ಮಾಡಬೇಕು ಎಂದು ಆಗ್ರಹಿಸಿದ ಅವರು ಇಲ್ಲವಾದರೆತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾಧ್ಯಕ್ಷ ನಾಗಯ್ಯ, ಸಂಯೋಜಕ ಕೃಷ್ಣಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮ. ಕೃಷ್ಣಮೂರ್ತಿ, ಎಸ್.ಪಿ. ಮಹೇಶ್, ರಾಜಶೇಖರ ಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.