ADVERTISEMENT

ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ: ನಳಿನ್‌ ಕುಮಾರ್‌ ಕಟೀಲ್‌

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 10:53 IST
Last Updated 30 ಜುಲೈ 2020, 10:53 IST
ನಳಿನ್‌ಕುಮಾರ್ ಕಟೀಲ್‌
ನಳಿನ್‌ಕುಮಾರ್ ಕಟೀಲ್‌   

ಕೊಳ್ಳೇಗಾಲ: ಮುಂದಿನ ಮೂರು ವರ್ಷಗಳ ಅವಧಿಗೂ ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಗುರುವಾರ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಸುಭದ್ರವಾಗಿದೆ. ಯಾವುದೇ ಅಪಸ್ವರವಿಲ್ಲ. ಈ ಬಗ್ಗೆ ಯಾರೂ ಸಂಶಯ ಪಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳನ್ನು ಬದಲಾಯಿಸಿ ಎಂದು ಶಾಸಕರು, ಮಂತ್ರಿಗಳು ಕೇಳಿಲ್ಲ. ಸರ್ಕಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.

ಪಕ್ಷದ ನಿರ್ಧಾರ ಅಲ್ಲ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಂದಿನ ಮುಖ್ಯಮಂತ್ರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಭಿಮಾನಿಗಳು ಬರೆದುಕೊಂಡಿದ್ದಾರೆ. ಅಲ್ಲಿ ಅಭಿಪ್ರಾಯ ವ್ಯಕ್ತಪಡಿಸುವವರು ಪಕ್ಷದವರಲ್ಲ. ಅವರು ಹೇಳುವುದು ಪಕ್ಷದ ತೀರ್ಮಾನ ಅಲ್ಲ. ಇಲಾಖೆಯ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಸವದಿ ಅವರು ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟದ್ದು’ ಎಂದು ಉತ್ತರಿಸಿದರು.

ಜನನಾಯಕ: ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ನಳಿನ್‌ಕುಮಾರ್‌ ಕಟೀಲ್‌ ಅವರು, ‘ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಜನರ ಮನಸ್ಸಿನಲ್ಲಿದ್ದು, ಜನ ನಾಯಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆರೆ, ಬರ, ಉಪಚುನಾವಣೆ, ಕೋವಿಡ್-19 ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಯಡಿಯೂರಪ್ಪ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಗ್ಗೆ ಸಿದ್ದರಾಮಣ್ಣ ಮಾತನಾಡುವ ಅವಶ್ಯಕತೆಯಿಲ್ಲ.ಯಡಿಯೂರಪ್ಪ ಅವರನ್ನು ಜನರು ಹೃದಯದಲ್ಲಿಟ್ಟು ಪೂಜೆ ಮಾಡುತ್ತಿದ್ದಾರೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.