ಚಾಮರಾಜನಗರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳ ನಿರ್ವಹಣೆಗಾಗಿ ನೇಮಕ ಮಾಡಿರುವ ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳ ಜೊತೆ ಪೂರ್ವಭಾವಿ ಸಭೆ ನಡೆಯಿತು.
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಏ.24 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಶಿಷ್ಟಾಚಾರ ಕಡ್ಡಾಯವಾಗಿ ಪಾಲನೆಯಾಗಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಿ.ಎಸ್. ರಮೇಶ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳ ನಿರ್ವಹಣೆಗಾಗಿ ನೇಮಕ ಮಾಡಲಾಗಿರುವ ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಸಚಿವ ಸಂಪುಟ ನಡೆಯುವ ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ವಡ್ಡುವಿನಲ್ಲಿ ಎಲ್ಲ ಸಿದ್ಧತಾ ಕಾರ್ಯಗಳನ್ನು ಖುದ್ದು ಪರಿಶೀಲಿಸಿ, ಕೆಲಸಗಳು ತ್ವರಿತವಾಗಿ ಪೂರ್ಣಗೊಳಿಸಬೇಕು. ಆಯಾ ಸಮಿತಿಗಳು ನಿರ್ವಹಿಸಬೇಕಿರುವ ಕೆಲಸಗಳು ಹಾಗೂ ಪೂರ್ವ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಶಿಷ್ಟಾಚಾರ, ಸ್ವಾಗತ, ವಸತಿ, ಸಾರಿಗೆ ಸಂಪರ್ಕ, ಇನ್ನಿತರ ಎಲ್ಲ ಕಾರ್ಯಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ಸಚಿವ ಸಂಪುಟ ಸಭೆ ನಡೆಯಲು ಜಿಲ್ಲೆಗೆ ಅವಕಾಶ ದೊರೆತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶ್ರದ್ಧೆ ಮುತುವರ್ಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಚಿವ ಸಂಪುಟ ಸಂಬಂಧ ಕಾರ್ಯ ನಿರ್ವಹಣೆಗಾಗಿ ರಚಿಸಲಾಗಿರುವ ಅಧಿಕಾರಿಗಳನ್ನು ಒಳಗೊಂಡ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳಿಂದ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಅನೇಕ ಮಾಹಿತಿಗಳನ್ನು ಪಡೆದರು.
ನಂತರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ , ಈಗಾಗಲೇ ಸಮಿತಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಕಾರ್ಯನಿರ್ವಹಣೆ ಸಂಬಂಧ ವಿವರ ಪಡೆಯಲಾಗುತ್ತಿದೆ. ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.