ADVERTISEMENT

ಚಾಮರಾಜನಗರ | ತಮಿಳುನಾಡಿಗೆ ನೀರು: ಬಣ್ಣದ ಡಬ್ಬಿ ಹಿಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2023, 12:46 IST
Last Updated 12 ನವೆಂಬರ್ 2023, 12:46 IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಚಾಮರಾಜನಗರದಲ್ಲಿ ಬಣ್ಣದ ಡಬ್ಬ ಹಿಡಿದು ಪ್ರತಿಭಟನೆ ನಡೆಸಿದರು
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಚಾಮರಾಜನಗರದಲ್ಲಿ ಬಣ್ಣದ ಡಬ್ಬ ಹಿಡಿದು ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 63ನೇ ದಿನವಾದ ಭಾನುವಾರವೂ ಪ್ರತಿಭಟನೆ ನಡೆಸಿದರು. 

ಚಾಮರಾಜೇಶ್ಚರ ಉದ್ಯಾನದ ಮುಂಭಾಗ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ಬಣ್ಣದ ಡಬ್ಬಿಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. 

ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸೇನಾ ಪ‍ಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ 63 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಸರ್ಕಾರಗಳು, ಕಾವೇರಿ ನಿರ್ವಹಣಾ ಪ್ರಾಧಿಕಾರ ಗಂಟೆಗೊಮ್ಮೆ ಬಣ್ಣ ಬದಲಾಯಿಸುತ್ತದೆ ಎಂದು ಆರೋಪಿಸಿ ಬಣ್ಣದ ಡಬ್ಬ ಹಿಡಿದು  ಪ್ರತಿಭಟನೆ ನಡೆಸಲಾಗಿದೆ’ ಎಂದರು.

‘ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ನಂಜುಂಡಸ್ವಾಮಿ, ಪ್ರಕಾಶ್, ತಾಂಡವಮೂರ್ತಿ, ವೀರಭದ್ರ, ರಾಚಪ್ಪ, ಇತರರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.