
ಚಾಮರಾಜನಗರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಪಟ್ಟ ಯೋಜನೆ, ಕಾರ್ಯಕ್ರಮ ಹಾಗೂ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಲೆಕ್ಕಾಧಿಕಾರಿಗಳು, ತಾಲ್ಲೂಕು ಯೋಜನಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ಶೇ 100ರಷ್ಟು ತೆರಿಗೆ ವಸೂಲಾತಿ ಮಾಡಬೇಕು, ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶೇ100 ಪ್ರಗತಿ ಸಾಧಿಸಬೇಕು. ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ನಿಗದಿತ ಸಮಯದೊಳಗೆ ಇ-ಹಾಜರಾತಿ ನಮೂದು ಮಾಡಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕಗಳ ಅನುಷ್ಠಾನ ಪ್ರಗತಿಯಲ್ಲಿ ಗುರಿ ಸಾಧಿಸಬೇಕು. ಬಿಡುಗಡೆಯಾದ ಅನುದಾನ ವಾಪಸ್ ಹೋಗದಂತೆ ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳಲ್ಲಿ ಅಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತುರ್ತು ಪೂರ್ಣಗೊಳಿಸಬೇಕು. ಮಾನವ ದಿನಗಳ ಸೃಜನೆ ಶೇ100ರಷ್ಟು ಪ್ರಗತಿಯಾಗಬೇಕು. ಯೋಜನೆಯಡಿ ಬಾಕಿಯಿರುವ ಎಲ್ಲ ನೋಂದಾಯಿತ ಸಕ್ರಿಯ ಕೂಲಿ ಕಾರ್ಮಿಕರ ಇ-ಕೆವೈಸಿ ಕಾರ್ಯವನ್ನು ವಾರದೊಳಗೆ ಪೂರ್ಣಗೊಳಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾಗಿರುವ ಶಾಲಾ ಅಭಿವೃದ್ಧಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಬಾಕಿ ಇರುವ ಬಿಲ್ ಪಾವತಿಸಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ವೇತನ ಪಾವತಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ತಿಳಿಸಿದರು.
ನಾರಿ-ಕಿಲ್ಫ್ ಯೋಜನೆಗೆ ಸಂಬಂಧಿಸಿದಂತೆ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಸರ್ವೆ ಅಬ್ಜೆಕ್ಷನ್ ಬಗ್ಗೆ ನೀಡಲಾಗಿರುವ ವಿವರವನ್ನು ಗ್ರಾಮ ಪಂಚಾಯಿತಿಗಳ ಸ್ವಚ್ಛವಾಹಿನಿ ವಾಹನದ ಮೂಲಕ ಪ್ರಚಾರ ಮಾಡಬೇಕು. ವಾಹನ ಇಲ್ಲದಿದ್ದಲ್ಲಿ ಡಂಗುರ ಸಾರಿಸುವ ಮೂಲಕ ಪ್ರಚಾರ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಶಾ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.
Highlights - ‘ನಿಗದಿತ ಅವದಿಯೊಳಗೆ ಯೋಜನೆ, ಕಾಮಗಾರಿ ಪೂರ್ಣಗೊಳಿಸಿ’ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶೇ100 ಪ್ರಗತಿ ಸಾಧಿಸಿ ‘ನರೇಗಾ; ಕೂಲಿ ಕಾರ್ಮಿಕರ ಇ-ಕೆವೈಸಿ ಮಾಡಿಸಿ’
Cut-off box - ‘ದುರ್ಬಲ ಕುಟುಂಬಗಳ ಪಟ್ಟಿ ಮಾಡಿ’ ಡಿ.20ರೊಳಗೆ ಅತ್ಯಂತ ದುರ್ಬಲ ಕುಟುಂಬಗಳ ಪ್ರಾಥಮಿಕ ಪಟ್ಟಿಯನ್ನು ಗ್ರಾಮ ಸಭೆಯಲ್ಲಿ ಮಂಡಿಸಿ ತಾಲ್ಲೂಕು ಪಂಚಾಯಿತಿಗಳ ಮೂಲಕ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವ ಸಲ್ಲಿಸಬೇಕು ತಿಂಗಳವಾರು ಗ್ರಾಮ ಪಂಚಾಯಿತಿ ಮಟ್ಟದ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸಬೇಕು ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪಟ್ಟಿಮಾಡಿ ಕಾಮಗಾರಿವಾರು ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಪರಿಹರಿಸಲು ತುರ್ತು ಕ್ರಮವಹಿಸುವಂತೆ ಕಾರ್ಯಪಾಲಕ ಎಂಜಿನಿಯರ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.