ADVERTISEMENT

ಚಾಮರಾಜನಗರ| ಅಭಿವೃದ್ಧಿಗೆ ವಿಜ್ಞಾನ ಬಳಕೆಯಾಗಲಿ: ಡಾ.ಪಿ ದೇವರಾಜ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 6:47 IST
Last Updated 4 ಮಾರ್ಚ್ 2026, 6:47 IST
ಚಾಮರಾಜನಗರದ ಮನೋನಿಧಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಮೈ ಭಾರತ್ ಕೇಂದ್ರ ಹಾಗೂ ರಂಗವಾಹಿನಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು  ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ ದೇವರಾಜ್ ಉದ್ಘಾಟಿಸಿದರು
ಚಾಮರಾಜನಗರದ ಮನೋನಿಧಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಮೈ ಭಾರತ್ ಕೇಂದ್ರ ಹಾಗೂ ರಂಗವಾಹಿನಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು  ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ ದೇವರಾಜ್ ಉದ್ಘಾಟಿಸಿದರು   

ಚಾಮರಾಜನಗರ: ವಿಜ್ಞಾನವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತ ಬದುಕಿಗೆ ಬಳಸಬೇಕಾದ ಜವಾಬ್ದಾರಿ ವಿಶ್ವದ ಮೇಲಿದೆ ಎಂದು ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ. ದೇವರಾಜ್ ಹೇಳಿದರು.

ಮನೋನಿಧಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಮೈ ಭಾರತ್ ಕೇಂದ್ರ ಹಾಗೂ ರಂಗವಾಹಿನಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಅತಿಯಾದ ತಂತ್ರಜ್ಞಾನದ ಬಳಕೆಯು ವಿನಾಶಕಾರಿ ಆಯುಧಗಳ ತಯಾರಿಕೆಗೆ ಕಾರಣವಾಗಬಹುದು‌. ಜಗತ್ತನ್ನೇ ವಿನಾಶಮಾಡಬಲ್ಲ ಪರಮಾಣು ಬಾಂಬ್‌ಗಳು ಮಾನವ ಕುಲಕ್ಕೆ ಅಪಾಯವನ್ನುಂಟು ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

‘ವಿಜ್ಞಾನವನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಸಂವಹನಕ್ಕೆ ಅಗತ್ಯವಾದ ಮೊಬೈಲ್ ಫೋನ್, ಕಂಪ್ಯೂಟರ್, ಇಂಟರ್‌ನೆಟ್, ವೈದ್ಯಕೀಯ ಸಾಧನಗಳು ವಿಜ್ಞಾನದ ಕೊಡುಗೆಗಳೇ ಆಗಿದ್ದು, ವಿಜ್ಞಾನವಿಲ್ಲದ ಜೀವನ ಕಲ್ಪಿಸಿಕೊಳ್ಳುವುದು ಕಷ್ಟ. ವಿಜ್ಞಾನವನ್ನು ಮಾನವ ಕಲ್ಯಾಣಕ್ಕಾಗಿ ಬಳಸುವುದರ ಮೂಲಕ ದೇಶದ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳಬೇಕಾದ ಅಗತ್ಯತೆ ಇದೆ’ ಎಂದು ಪ್ರತಿಪಾದಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಿ.ಎನ್.ಲೋಕೇಶ್, ‘ದೇಶದ ಮಹಾನ್ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಜನ್ಮದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿಜ್ಞಾನ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದ್ದು ವಿಜ್ಞಾನದ ಹೊರತಾಗಿ ಬದುಕುವುದು ಕಷ್ಟ ಎಂಬ ವಾತಾವರಣ ನಿರ್ಮಾಣವಾಗಿದೆ’ ಎಂದರು.

ದೇಶದ ಅಭಿವೃದ್ಧಿಯಲ್ಲೂ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಿದ್ದು, ವಿದ್ಯಾರ್ಥಿಗಳು ವಿಜ್ಞಾನ ತಂತ್ರಜ್ಞಾನದತ್ತ ಒಲವು ಬೆಳೆಸಿಕೊಂಡು ಸಮಾಜದಲ್ಲಿ ಹಾಸುಹೊಕ್ಕಾಗಿರುವ ಮೌಢ್ಯ, ಕಂದಾಚಾರಗಳನ್ನು ನಿವಾರಿಸಬೇಕು. ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿ.ಎಂ. ನರಸಿಂಹ ಮೂರ್ತಿ, ‘ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಧಿಕ್ಕರಿಸಲು ಜನಜಾಗೃತಿ ಮೂಡಿಸಲು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ವಿಜ್ಞಾನ ಮಾನವ ಕುಲದ ಪ್ರಗತಿಯ ಶಕ್ತಿಯಾಗಿದ್ದು, ಜವಾಬ್ದಾರಿಯುತವಾಗಿ ಬಳಸುವುದು ಪ್ರಸ್ತುತ ದಿನಮಾನಗಳಲ್ಲಿ ಅತ್ಯಂತ ಮಹತ್ವವಾಗಿದೆ’ ಎಂದರು.

ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು.

ಮನೋನಿಧಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸಂಸ್ಥೆಯ ಕಾರ್ಯದರ್ಶಿ ಡಾ.ಶೈಲಜಾ ಕೃಪಾನಿಧಿ, ಪ್ರಾಂಶುಪಾಲ ಸಿಬಿನ್ ಸಿ.ವರ್ಗೀಸ್, ಯುವ ಸ್ಪಂದನದ ರವಿಕುಮಾರ್, ಜನಪದ ಗಾಯಕ ಗುರುರಾಜ್ ಭಾಗವಹಿಸಿದ್ದರು.

ವಿಜ್ಞಾನ ವಿನಾಶಕಾರಿಗೆ ಅಭಿವೃದ್ಧಿಗೆ ಕಾರಣವಾಗಬಲ್ಲದು ಮೌಢ್ಯ ಕಂದಾಚಾರ ನಿರ್ಮೂಲನೆಗೆ ವಿಜ್ಞಾನ ಸಹಕಾರಿ ಯುವಜನರು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.