ಪ್ರಾತಿನಿಧಿಕ ಚಿತ್ರ
ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅ.13ರಂದು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ರೈತ ಸಂಘದ ವತಿಯಿಂದ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆಗೆ ನೀರು ತುಂಬಿಸುವ 4ನೇ ಹಂತದ ಹುತ್ತೂರು ಕೆರೆಯಿಂದ ಮುಂದಿನ ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಗಾಂಧಿ ಗ್ರಾಮ ಯೋಜನೆಯಲ್ಲಿ ಕಸಬಾ ಮತ್ತು ಬೇಗೂರು ಹೋಬಳಿಯ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು. 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಶೀಘ್ರದಲ್ಲೆ ಪ್ರಾರಂಭ ಮಾಡಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಮಾಡಿದರೂ ಕ್ರಮ ವಹಿಸಿಲ್ಲ ಎಂದು ಎಂದು ಅಸಮಾಧಾನ ಹೊರ ಹಾಕಿದರು.
ಕಳೆದ 50-60 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡಲು ಅರಣ್ಯ ಇಲಾಖೆಯಿಂದ ಎನ್ಒಸಿ ನೀಡಬೇಕು. ಸಾಗುವಳಿ ನೀಡಿರುವ ರೈತರಿಗೆ ಪಹಣಿ ಕೊಡಿ, ಹದ್ದು-ಬಸ್ತು ದುರಸ್ತಿ ಮಾಡುವುದರ ಜೊತೆಗೆ ರೈತರ ಕೃಷಿ ಭೂಮಿ ಉಳಿಸುವಲ್ಲಿ ತಾಲ್ಲೂಕು ಆಡಳಿತ ಮುಂದಾಗಬೇಕು ಎಂದು ಹೇಳಿದರು.
ರೈತರು ಜಮೀನು ಮತ್ತು ಗ್ರಾಮಗಳ ಕಡೆಗೆ ಬರುವ ಕಾಡು ಪ್ರಾಣಿಗಳನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ವಿಫಲವಾಗಿದ್ದು, ಹಣದ ಆಸೆಗೆ ಅರಣ್ಯ ಇಲಾಖೆಯವರು ಪ್ರವಾಸಿಗರನ್ನು ಅರಣ್ಯದೊಳಗೆ ಕರೆದುಕೊಂಡು ಹೋಗುವ ಸಫಾರಿಯನ್ನು ತಕ್ಷಣ ನಿಲ್ಲಿಸಿ, ರೆಸಾರ್ಟ್ಗಳನ್ನು ತೆರವುಗೊಳಿಸಿ ಮಾನವ ಮತ್ತು ಪ್ರಾಣಿ ಸಂಘರ್ಷವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ರೈತರ ಪಂಪ್ಸೆಟ್ಗಳಿಗೆ ಸಂಜೆ 6 ಬೆಳಿಗ್ಗೆ 6 ಗಂಟೆಯವರೆಗೆ ನಿರಂತರ ವಿದ್ಯುತ್ ನೀಡಬೇಕು. ಹಿಂದಿನ ಅಕ್ರಮ-ಸಕ್ರಮ ಯೋಜನೆಯನ್ನು ಮುಂದುವರಿಸಿ ರೈತರ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ತೀರ ಹದೆಗೆಟ್ಟಿದ್ದು, ಮನೆಗಳ್ಳತನ ಹಾಗೂ ಪಂಪ್ಸೆಟ್ ಕೇಬಲ್ ವೈರ್ಗಳ ಕಳ್ಳತನ ಮುಂದುವರಿದಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಕಿಡಿಕಾರಿದರು.
ಧರಣಿಯಲ್ಲಿ ರಾಜ್ಯ ಮತ್ತು ಜಿಲ್ಲೆಯ ಹಾಗೂ ತಾಲ್ಲೂಕಿನ ರೈತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆದ್ದರಿಂದ ತಾಲ್ಲೂಕಿನ ರೈತರು, ರೈತ ಕಾರ್ಮಿಕರು, ರೈತ ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಪ್ರಜ್ಞಾವಂತ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ರೈತ ಸಂಘಟನೆ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯನಪುರ ಶಿವಣ್ಣ, ಮುಖಂಡರಾದ ನಾಗರಾಜು, ಮಹೇಂದ್ರ, ಮಹದೇವಪ್ಪ, ಪುಟ್ಟೇಗೌಡ, ಮಹದೇವೇಗೌಡ, ಮಹದೇವಸ್ವಾಮಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.