ADVERTISEMENT

ಗಡಿ ಜಿಲ್ಲೆಯಲ್ಲಿ ಕನ್ನಡ ಗಟ್ಟಿ: ಜಿಲ್ಲಾಧಿಕಾರಿ

ಅಖಿಲ ಕರ್ನಾಟಕ ಕನ್ನಡ ಮಹಾಸಭಾದಿಂದ ಕರ್ನಾಟಕ ಏಕೀಕರಣ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 13:47 IST
Last Updated 1 ಡಿಸೆಂಬರ್ 2020, 13:47 IST
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರನ್ನು ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರನ್ನು ಸನ್ಮಾನಿಸಲಾಯಿತು   

ಚಾಮರಾಜನಗರ: ‘ರಾಜ್ಯದ 19 ಗಡಿ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ ಕನ್ನಡ ಗಟ್ಟಿಯಾಗಿ ಜೀವಂತವಾಗಿ ಉಳಿದಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶ್ಲಾಘಿಸಿದರು.

ನಗರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಏಕೀಕರಣ ಮಹೋತ್ಸವದಲ್ಲಿ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿಕರ್ನಾಟಕ ಪರ ಸಂಘಟನೆಗಳು, ಕನ್ನಡದ ಮನಸುಗಳು ಜನರಲ್ಲಿ ಜಾಗೃತಿ ಉಂಟು ಮಾಡುತ್ತಿದ್ದಾರೆ. ಕನ್ನಡ ಹೋರಾಟಗಾರರು ನಿಸ್ವಾರ್ಥ ಸೇವೆಯ ಮೂಲಕ ಕನ್ನಡ ತಾಯಿಯ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಕರ್ನಾಟಕ ರಾಜ್ಯೋತ್ಸವಕ್ಕೆ ಕರ್ನಾಟಕ ಏಕೀಕರಣ ಮೂಲ ಪ್ರೇರಣೆ. ಕನ್ನಡ ಹೋರಾಟಗಾರರು ಮನೆ, ಕುಟುಂಬದವರನ್ನು ಬಿಟ್ಟು ಫಲಾಪೇಕ್ಷೆ ಇಲ್ಲದೆ ಕನ್ನಡ ಬೆಳವಣಿಗೆಗೆ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ. ನಮ್ಮಲ್ಲಿ ಪರಭಾಷೆ ವ್ಯಾಮೋಹದಿಂದ ಕನ್ನಡಕ್ಕೆ ಧಕ್ಕೆಯಾಗುತ್ತಿದೆ. ಆದರಿಂದ ಪ್ರತಿ ಮನೆಯಲ್ಲೂ ಕನ್ನಡ ವಾತಾವರಣ ಸೃಷ್ಟಿಯಾಗಬೇಕಿದೆ’ ಎಂದರು.

ADVERTISEMENT

ತಿ.ನರಸೀಪುರ ವಾಟಾಳ್ ಸೂರ್ಯಸಿಂಹಾಸನ ಮಠದ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ, ‘ಐಎಎಸ್ ಅಧಿಕಾರಿಗಳು ಕನ್ನಡದಲ್ಲಿ ಮಾತನಾಡುವುದೇ ಕಷ್ಟ. ಅಂತಹದರಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಕನ್ನಡ ನಾಡು, ನುಡಿ,ಭಾಷೆ ಬಗ್ಗೆ ಹೆಚ್ಚು ಅಭಿಮಾನ ಹೊಂದಿರುವುದು ಸಂತಸದ ವಿಚಾರ ಎಂದರು.

ನಗರದ ಶ್ರೀ ಸಿದ್ಧಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಅವರು ಮಾತನಾಡಿ, ‘ಸನ್ಮಾರ್ಗದಲ್ಲಿ ನಡೆಯುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕ ಪ್ರತಿವರ್ಷ ಕರ್ನಾಟಕ ಏಕೀಕರಣ ಮಹೋತ್ಸವದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿ ಪ್ರೋತ್ಸಾಹಿಸಿಕೊಂಡು ಹೋಗುತ್ತಿರುವುದು ಆಶಯದಾಯಕ ಬೆಳವಣಿಗೆ’ ಎಂದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ, ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ, ಚುಡಾ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ, ಮಹಾಸಭಾ ಗೌರವ ಅಧ್ಯಕ್ಷ ಶಾ.ಮುರಳಿ, ಪ್ರಧಾನ ಕಾರ್ಯದರ್ಶಿ ಚಾ.ವೆಂ.ರಾಜ್‌ಗೋಪಾಲ್, ಮುಖಂಡರಾದ ವೆಂಕಟರಮಣಸ್ವಾಮಿ (ಪಾಪು), ಸುರೇಶ್‌ನಾಯಕ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಸ್.ವಿನಯ್, ನಿಜಧ್ವನಿಗೋವಿಂದರಾಜು, ಮಹಾಸಭಾ ಸಹ ಕಾರ್ಯದರ್ಶಿ ಪಣ್ಯದಹುಂಡಿರಾಜು, ಉಪನ್ಯಾಸಕ ಸುರೇಶ್ ಎನ್.ಋಗ್ವೇದಿ, ಆಲೂರು ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.