ADVERTISEMENT

ಮಹದೇಶ್ವರ ಬೆಟ್ಟಕ್ಕೆ ಡಿ.ಸಿ ಭೇಟಿ: ಸಿದ್ಧತೆಗಳ ಪರಿಶೀಲನೆ

25,26ರಂದು ಮುಖ್ಯಮಂತ್ರಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 14:40 IST
Last Updated 21 ನವೆಂಬರ್ 2020, 14:40 IST
ಮುಖ್ಯಮಂತ್ರಿ ಭೇಟಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳ ಸಭೆ ನಡೆಸಿ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು
ಮುಖ್ಯಮಂತ್ರಿ ಭೇಟಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳ ಸಭೆ ನಡೆಸಿ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು   

ಮಹದೇಶ್ವರ ಬೆಟ್ಟ: ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇದೇ 25, 26ರಂದು ಭೇಟಿ ನೀಡುತ್ತಿರುವುದರಿಂದ, ಕೈಗೊಳ್ಳಲಾಗಿರುವ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶನಿವಾರ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸುವುದರ ಜೊತೆಗೆ ಹಲವು ಯೋಜನೆಗಳಿಗೆ ಮುಖ್ಯಮಂತ್ರಿ ಅವರು ಶಂಕು ಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯ ಸಾರ ಥಾಮಸ್‌ ಕೂಡ ಜಿಲ್ಲಾಧಿಕಾರಿ ಅವರ ಜೊತೆಗಿದ್ದರು. ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ವಿವರಿಸಿದರು.

ADVERTISEMENT

ಮುಖ್ಯಮಂತ್ರಿ ಹಾಗೂ ಸಚಿವರು ವಾಸ್ತವ್ಯ ಹೂಡುವ ವಸತಿಗೃಹಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರು ಎಲ್ಲ ಅವಶ್ಯಕ ಕ್ರಮಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಹೆಲಿಪ್ಯಾಡ್‌ಗೂ ಭೇಟಿ ನೀಡಿ ಅಲ್ಲಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಮುಖ್ಯಮಂತ್ರಿ ಅವರು ಭೇಟಿ ನೀಡಲಿರುವ ಕ್ಷೇತ್ರದ ಸ್ಥಳಗಳಿಗೆ ಭೇಟಿ ನೀಡಿದರು. ದೇವಾಲಯ, ದಾಸೋಹ ಭವನಕ್ಕೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಮಾರಂಭ ನಡೆಯುವ ರಂಗಮಂದಿರಕ್ಕೂ ಭೇಟಿಕೊಟ್ಟು ಸಿದ್ಧತೆಗಳನ್ನು ವೀಕ್ಷಿಸಿದರು.

ಅಧಿಕಾರಿಗಳ ಸಭೆ: ಆ ಬಳಿಕನಾಗಮಲೆ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಡಾ.ಎಂ.ಆರ್.ರವಿ ಅವರು, ವಿವಿಧ ಇಲಾಖೆಗಳಿಗೆ ನೀಡಲಾಗಿರುವ ಜವಾಬ್ದಾರಿ ಹಾಗೂ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

‘ಮುಖ್ಯಮಂತ್ರಿ ಅವರ ಭೇಟಿ ವೇಳೆ ಶಿಷ್ಟಾಚಾರ ಕಡ್ಡಾಯವಾಗಿ ಪಾಲನೆ ಮಾಡಬೇಕು. ಲೋಪಕ್ಕೆ ಅವಕಾಶವಾಗದ ಹಾಗೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

‘ಕಾರ್ಯಕ್ರಮ ನಡೆಯುವ ರಂಗಮಂದಿರದಲ್ಲಿ ವೇದಿಕೆ ನಿರ್ಮಾಣ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು. ಅಸನಗಳ ಅಳವಡಿಕೆ ವ್ಯವಸ್ಥೆ ಕಾರ್ಯವೂ ಸಮರ್ಪಕವಾಗಿರಬೇಕು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಗಣ್ಯರು, ಆಹ್ವಾನಿತರು, ಸಭಿಕರಿಗೆ ಪ್ರತ್ಯೇಕ ಪ್ರವೇಶದ್ವಾರ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಲೂರು ಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್, ಉಪ ವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಸುರೇಂದ್ರ, ಹನೂರು ತಹಶೀಲ್ದಾರ್ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.