ADVERTISEMENT

ತಾ.ಪಂ. ಉಪಾಧ್ಯಕ್ಷ ಬಸವಣ್ಣ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 14:43 IST
Last Updated 17 ಫೆಬ್ರುವರಿ 2020, 14:43 IST
ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಉಪಾದ್ಯಕ್ಷ ಜಿ.ಬಸವಣ್ಣ ಅವರು ಅಧ್ಯಕ್ಷೆ ಶೋಭಾ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದರು
ಚಾಮರಾಜನಗರ ತಾಲ್ಲೂಕು ಪಂಚಾಯಿತಿ ಉಪಾದ್ಯಕ್ಷ ಜಿ.ಬಸವಣ್ಣ ಅವರು ಅಧ್ಯಕ್ಷೆ ಶೋಭಾ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದರು   

ಚಾಮರಾಜನಗರ: ಚಾಮರಾಜನಗರ ತಾಲ್ಲೂಕು ಪಂಚಾಯಿತಿಯ ಉಪಾಧ್ಯಕ್ಷ ಜಿ.ಬಸವಣ್ಣ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷೆ ಎಚ್‌.ಎಸ್‌.ಶೋಭಾ ಅವರನ್ನು ಭೇಟಿ ಮಾಡಿದ ಬಸವಣ್ಣ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಿ.ಎನ್‌.ದಯಾನಿಧಿ ಅವರ ರಾಜೀನಾಮೆ ನಂತರ 2019ರ ಜನವರಿ 9ರಂದು ಬಸವಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ADVERTISEMENT

ತಮ್ಮ ನಿರ್ಧಾರದ ಬಗ್ಗೆ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಬಸವಣ್ಣ ಅವರು, ‘ಪಕ್ಷದಲ್ಲಿ ನಡೆದ ಆಂತರಿಕ ಒಪ್ಪಂದದಂತೆ ರಾಜೀನಾಮೆ ನೀಡಿದ್ದೇನೆ. 13 ತಿಂಗಳು ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ವರಿಷ್ಠರು ಕರೆ ಮಾಡಿ ಇನ್ನು 13 ತಿಂಗಳು ಬೇರೆಯವರಿಗೆ ಅವಕಾಶ ನೀಡುವಂತೆ ಸೂಚಿಸಿದರು. ಅದರಂತೆ ನಡೆದುಕೊಂಡಿದ್ದೇನೆ’ ಎಂದು ಹೇಳಿದರು.

‘ಮುಂದೆ ಯಾರು ಉಪಾಧ್ಯಕ್ಷರಾಗುತ್ತಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಕ್ಷಗಳ ಬಲಾಬಲ:29 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ 17 ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಬಹುಮತ ಹೊಂದಿದೆ. ಆದರೆ, ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಬಿಜೆಪಿಯಲ್ಲಿ ಆ ಸಮುದಾಯಕ್ಕೆ ಸೇರಿದವರು ಯಾರೂ ಇಲ್ಲದಿರುವುದರಿಂದ ಆ ಸ್ಥಾನ 11 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ ಪಾಲಾಗಿದೆ. ವಾಟಾಳ್‌ ಪಕ್ಷ ಇನ್ನೊಂದು ಸ್ಥಾನ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.