
ಚಾಮರಾಜನಗರ: ಸ್ತ್ರೀಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಎಚ್ಚರಿಕೆ ವಹಿಸಬೇಕು, ಪ್ರಾಥಮಿಕ ಹಂತದಲ್ಲಿಯೇ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಂಡರೆ ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗಗಳ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್ ಸಲಹೆ ನೀಡಿದರು.
ಚಾಮರಾಜನಗರದ ಹೊರವಲಯದಲ್ಲಿರುವ ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಮೈಸೂರಿನ ನಾರಾಯಣ ಹೆಲ್ತ್ಕೇರ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವೈಕಲ್ ಕ್ಯಾನ್ಸರ್ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈಚೆಗೆ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಗತ್ತಿನಲ್ಲಿ ಭಾರತದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ.
ಗರ್ಭಕಂಠ ಕ್ಯಾನ್ಸರ್ಗೆ ಚಿಕಿತ್ಸೆ ಇದ್ದರೂ ಬಾಧಿತರು ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಬರುತ್ತಿರುವುದು ರೋಗಿಗಳನ್ನು ಬದುಕುಳಿಸುತ್ತಿರುವುದು ಕಷ್ಟವಾಗುತ್ತಿದೆ. ಆರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಿ ಸಹಜ ಜೀವನ ನಡೆಸಬಹುದು ಎಂದರು.
ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿ ಗರ್ಭ ಧರಿಸುತ್ತಿರುವ ಮಹಿಳೆಯರಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದ್ದು ತಡೆಯಲು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಲಾಗುತ್ತದೆ. ಈಚೆಗೆ ಪ್ರೌಢಶಾಲಾ ಹಂತದಲ್ಲಿಯೇ ಎಚ್ಪಿವಿ ಲಸಿಕೆ ಹಾಕಲಾಗುತ್ತದೆ. ಅನಿಮಿಯತವಾಗಿ ಬಿಳಿಸೆರಗು ಹೋಗುವುದು ಕಾಯಿಲೆಯ ಲಕ್ಷಣಗಳಲ್ಲಿ ಒಂದು. ಮುಂಜಾಗೃತಾ ಕ್ರಮಗಳು ಗರ್ಭಕಂಠ ಕ್ಯಾನ್ಸರ್ನಿಂದ ದೂರ ಇರಬಹುದು.
ಕಿರಿಯ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳಿಗೆ ಗರ್ಭಕಂಠ ಕ್ಯಾನ್ಸರ್ ಬಗ್ಗೆ ತಜ್ಞ ವೈದ್ಯರಿಂದ ಮಾಹಿತಿ ನೀಡುವುದು ಹಾಗೂ ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿಮ್ಸ್ ಡೀನ್ ಡಾ.ಎಚ್.ಜಿ.ಮಂಜುನಾಥ್ ಮಾತನಾಡಿ, ವೈದ್ಯಕೀಯ ಕಾಲೇಜಿನ ಎಲ್ಲ ವಿಭಾಗಗಳಿಂದ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ವಿಚಾರ ವಿನಿಯಮಕ್ಕೆ ನಿರಂತರ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಮುಂದುವರಿದ ವೈದ್ಯಕೀಯ ಶಿಕ್ಷಣಕ್ಕೆ ಬುನಾದಿ ಹಾಕಲಾಗುತ್ತಿದೆ. ಇಂತಹ ಕಾರ್ಯಾಗಾರಗಳು ವೈದ್ಯಕೀಯ ವಿದ್ಯಾರ್ಥಿಗಳ ಕೌಶಲವನ್ನು ಹೆಚ್ಚಿಸುತ್ತವೆ, ಕಿರಿಯ ವೈದ್ಯರ ವೃತ್ತಿ ಕೌಶಲ ವೃದ್ಧಿಸುತ್ತದೆ. ರೋಗಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಗುಣಾತ್ಮಕ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದರು.
ಸಿಮ್ಸ್ನಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಲಸಿಕೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ರೋಗ ತಡೆಯಲು ತಜ್ಞ ವೈದ್ಯರ ತಂಡ ಶ್ರಮಿಸುತ್ತಿದ್ದು ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ. ಗರ್ಭಕಂಠ ಕ್ಯಾನ್ಸರ್ನ ಲಕ್ಷಣಗಳು ಕಂಡುಬಂದರೆ ಮಹಿಳೆಯರು ತಕ್ಷಣ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಡಾ. ಸೋಮೇಗೌಡ, ಡಾ.ಸುಭಾಷ್, ಡಾ.ವಿದ್ಯಾ, ಡಾ.ಪ್ರದೀಪ್, ಡಾ. ಲೇಪಾಕ್ಷಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದು.
ಸಿಮ್ಸ್ ಪ್ರಾಂಶುಪಾಲ ಡಾ. ಅಜಯ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಚಿನ್ನಬೋವಿ, ವೈದ್ಯಕೀಯ ಅಧೀಕ್ಷಕ ಡಾ.ಮಾರುತಿ, ಪ್ರಸೂತಿ ತಜ್ಞವೈದ್ಯೆ ಡಾ.ರಾಜೇಶ್ವರಿ, ಡಾ.ಭಾರತಿ, ಡಾ.ನವೀನ್ ಚಂದ್ರ, ಡಾ.ಸರಸ್ವತಿ, ಡಾ.ನಾರಾಯಣ, ಸ್ನಾತಕೊತ್ತರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.