ಚಾಮರಾಜನಗರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆಯನ್ನು ಪರಿಶಿಷ್ಟ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವರ್ತನೆ ಖಂಡನೀಯ. ಆರೋಪಿಯನ್ನು ವಕೀಲ ವೃತ್ತಿಯಿಂದ ವಜಾಗೊಳಿಸಿ ದೇಶದಿಂದ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರಾ ಎಂಬಾತ ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಅಂಬೇಡ್ಕರ್, ಸಂವಿಧಾನಕ್ಕೆ ಅಗೌರವ ತೋರಿಸಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಕೀಲ ರಾಜೇಶ್ ಕಿಶೋರ್ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅ.13ರಂದು ಸಂಜೆ 5 ಗಂಟೆಗೆ ಜಿಲ್ಲಾಡಳಿತ ಮುಂಭಾಗ ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಸಂಘದ ಗೌರವ ಸಲಹೆಗಾರ ಮಹಾದೇವಸ್ವಾಮಿ, ಉಪಾಧ್ಯಕ್ಷ ಎ.ಎನ್.ಗಜೇಂದ್ರ, ಮಹೇಂದ್ರ, ಸಿ.ಎಂ.ಮುರುಗೇಶ್ ಕುಮಾರ್, ನಂಜುಂಡ, ಬಿ.ರವಿಕುಮಾರ್, ನಾರಾಯಣ್, ಶ್ರೀನಿವಾಸ ಮೂರ್ತಿ, ಜಯಶಂಕರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.