
ಗುಂಡ್ಲುಪೇಟೆ: ಶುದ್ಧ ಆಹಾರ ಸೇವನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿದರೆ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ತಿಳಿಸಿದರು.
ಪಟ್ಟಣದಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳ ನಿವಾರಣೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. 1ರಿಂದ 19 ವರ್ಷದ ಮಕ್ಕಳಿಗೆ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಂತುಹುಳ ನಿವಾರಣೆ ಮಾತ್ರೆಯನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
‘ ಕರುಳಿನಲ್ಲಿ ಜಂತು ಹುಳು ಇರುತ್ತದೆ. ಮನುಷ್ಯನ ರಕ್ತವನ್ನು ಹೀರುವುದರಿಂದ ರಕ್ತಹೀನತೆ ಉಂಟಾಗುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಶುದ್ಧ ನೀರನ್ನು ಕುಡಿಯಬೇಕು. ಆಹಾರವನ್ನು ಮುಚ್ಚಿಟ್ಟು ಸೇವನೆ ಮಾಡಬೇಕು. ಬರಿ ಕಾಲಿನಿಂದ ನಡೆಯಬಾರದು., ಬಯಲಿನಲ್ಲಿ ಮಲವಿಸರ್ಜನೆ ಮಾಡಬಾರದು’ ಎಂದು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸತೀಶ, ಮುಖ್ಯ ಶಿಕ್ಷಕ ಸಿದ್ದಾರ್ಥ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಘವೇಂದ್ರ , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.