ಚಾಮರಾಜನಗರ: ‘ಶಾಲಾ ಮಕ್ಕಳಿಗೆ ಶಿಕ್ಷಕರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಕುರಿತು ತರಬೇತಿ ನೀಡಿದರೆ ಸಾಂಸ್ಕೃತಿಕವಾಗಿ ಸ್ಪರ್ಧೆ ನೀಡಲು ಅನುಕೂಲವಾಗಲಿದೆ’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಎನ್.ನೇತ್ರಾವತಿ ಸಲಹೆ ನೀಡಿದರು.
ಪಟ್ಟಣದಸಂತೇಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬೀದಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಚಾಮರಾಜನಗರ ತಾಲ್ಲೂಕು ಕ್ಲಸ್ಟರ್ ಮಟ್ಟದ 4ನೇ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಮಕ್ಕಳಿಗೆ ನೃತ್ಯ, ನಾಟಕ, ದೇಶಭಕ್ತಿಗೀತೆಗಳ ಬಗ್ಗೆ ತರಬೇತಿ ನೀಡಿದರೆ ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ತಾಲ್ಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಉತ್ಸಾಹ ಬರಲಿದೆ ಎಂದು ಹೇಳಿದರು.
ಶಾಲೆಗಳಲ್ಲಿ ನಡೆಯುವ ಎಲ್ಲಕಾರ್ಯಕ್ರಮಗಳಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸುವುದರಿಂದ ವೇದಿಕೆಯಲ್ಲಿ ಪ್ರದರ್ಶನ ನೀಡಲು ಧೈರ್ಯ ಬರಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ಈ ವೇದಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿನೌಕರರ ಸಂಘದ ಗೌರವಾಧ್ಯಕ್ಷ ರಂಗಸ್ವಾಮಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್, ಸಂಘದ ಸದಸ್ಯರಾದ ಸುಧಾ, ಗಂಗಾಂಬಿಕೆ, ಮಲ್ಲಿಕಾರ್ಜುನ, ಜೋಸೆಫ್, ಜಯರಾಜು, ಆನಂದ್, ಶಾಲೆಯ ಮುಖ್ಯ ಶಿಕ್ಷಕ ಮಹದೇವಸ್ವಾಮಿ, ಜಿಲ್ಲಾ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.