
ಚಾಮರಾಜನಗರ: ರೈತರಿಗೆ ಸಮಸ್ಯೆಗಳಾದರೆ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ತುರ್ತು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸಬೇಕು. ರೈತರು ಹಾಗೂ ಸಾರ್ವಜನಿಕರ ವಿಶ್ವಾಸ ಗಳಿಸಿ ಕುಂದುಕೊರತೆ ಆಲಿಸಿ ಪರಿಹರಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಲಾಗುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ಗಳನ್ನು ಹೊರತುಪಡಿಸಿ ಅನಧಿಕೃತವಾಗಿ ಖಾಸಗಿ ವಾಹನಗಳು ಬೆಟ್ಟಕ್ಕೆ ಸಂಚರಿಸಲು ಅನುಮತಿ ನೀಡಲಾಗುತ್ತಿದೆ. ಆದರೆ, ಸ್ಥಳೀಯ ರೈತರ ವಾಹನಗಳಿಗೆ ಅವಕಾಶ ನೀಡದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದು ರೈತರು ಜಿಲ್ಲಾಧಿಕಾರಿ ಗಮನಕ್ಕೆ ತಂದರು.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ಸಾರ್ವಜನಿಕರಿಗೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕೆಎಸ್ಆರ್ಟಿಸಿ ಬಸ್ ಹತ್ತುವ ಸ್ಥಳದಲ್ಲಿ ಭಕ್ತರಿಗೆ ಕನಿಷ್ಠ ಮೂಲಸೌಲಭ್ಯ ಒದಗಿಸಬೇಕು ಎಂದು ರೈತ ಮುಖಂಡರು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
ಕೇರಳ ರಾಜ್ಯದಿಂದ ನಿಯಮ ಬಾಹಿರವಾಗಿ ಜೈವಿಕ ತ್ಯಾಜ್ಯವನ್ನು ತಂದು ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ರೈತರ ಜಮೀನುಗಳಿಗೆ ಸುರಿಯಲಾಗುತ್ತಿದೆ. ಇದರಿಂದ ನೆಲ, ಜಲ ಕಲುಷಿತಗೊಳ್ಳುತ್ತಿದ್ದು ರೋಗಗಳು ಹರಡುವ ಆತಂಕವಿದ್ದು ತಡೆಯೊಡ್ಡಬೇಕು. ರೈತರ ಜಮೀನಿನಲ್ಲಿ ಬೆಳೆದಿರುವ ತೇಗದ ಮರಗಳನ್ನು ಕಡಿಯಲು ಅನುಮತಿ ನೀಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಳಂಬ ಮಾಡುತ್ತಿರುವುದರಿಂದ ತೊಂದರೆಯಾಗುತ್ತಿದ್ದು ಬಗೆಹರಿಸಬೇಕು.
ರೈತರ ಜಮೀನುಗಳಲ್ಲಿ ಕೋತಿ, ನವಿಲು, ಕಾಡು ಹಂದಿಗಳ ದಾಳಿ ಹೆಚ್ಚಾಗಿದ್ದು ಬೆಳೆ ಹಾನಿಯಾದರೂ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಇಂತಹ ಪ್ರಕರಣಗಳನ್ನು ಮಾನವ-ಪ್ರಾಣಿ ಸಂಘರ್ಷಕ್ಕೆ ಸೇರ್ಪಡೆ ಮಾಡಬೇಕು, ವಿಪರೀತ ಗಣಿಗಾರಿಕೆಯ ಪರಿಣಾಮ ನಿಗದಿಗಿಂತ ಅಧಿಕ ಭಾರ ಹೊತ್ತ ಟಿಪ್ಪರ್ಗಳು ಸಣ್ಣ ರಸ್ತೆಗಳಲ್ಲಿ ಸಂಚರಿಸುತ್ತಿದ್ದು ಗುಂಡಿಗಳು ಬಿದ್ದು ನಾಗರಿಕರ ಸಂಚಾರಕ್ಕೆ ಯೋಗ್ಯವಾಗಿಲ್ಲ. ನಿರಂತರವಾಗಿ ಕ್ರಶರ್ಗಳಿಂದ ಕಲ್ಲುಗಳನ್ನು ಹೊತ್ತೊಯ್ಯುವ ವಾಹನಗಳ ಓಡಾಟದಿಂದ ಜನರಿಗೆ ತೊಂದರೆಯಾಗುತ್ತಿದ್ದು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ ‘ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಚಿತ್ರೀಕರಣಕ್ಕೆ ಅನುಮತಿ ನೀಡುವುದು, ಖಾಸಗಿ ವಾಹನಗಳ ಬಳಕೆಯ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು. ಶೀಗ್ರ ಸಮಸ್ಯೆಗಳ ಕುರಿತು ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಭೆ ಏರ್ಪಡಿಸಿ ಬಗೆಹರಿಸಲಾಗುವುದು.
ರೈತರ ಜಮೀನಿಗೆ ಕೇರಳದಿಂದ ತ್ಯಾಜ್ಯ ಸುರಿಯದಂತೆ ಮದ್ದೂರು ಗ್ರಾಮದಲ್ಲಿ ಚೆಕ್ಪೋಸ್ಟ್ ತೆರೆದು ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ತಡೆಯೊಡ್ಡಲಾಗುವುದು. ತೇಗದ ಮರ ಕಡಿಯುವ ಸಂಬಂಧ ಹಾಲಿ ನಿಯಮಗಳನ್ನು ಸಡಿಲಗೊಳಿಸುವ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಅಕಾಲಿಕ ಮಳೆಯಿಂದ ಉಂಟಾದ ಬೆಳೆನಷ್ಟಕ್ಕೆ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯ ಸಮರ್ಪಕವಾಗಿರಬೇಕು. ಯಳಂದೂರಿನ ಅಂಬಳೆ ಗ್ರಾಮ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಬೆಟ್ಟಳ್ಳಿ ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲದೆ ಶಾಲಾ ಮಕ್ಕಳಿಗೆ ಹಾಗೂ ದಿನನಿತ್ಯ ಕೆಲಸಕ್ಕೆ ಹೋಗಿ ಬರುವವರಿಗೆ ತೊಂದರೆಯಾಗುತ್ತಿರುವ ದೂರುಗಳಿದ್ದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ತುರ್ತು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚಿಸಿದರು.
ರೈತ ಮುಖಂಡರಾದ ಕಟ್ನವಾಡಿ ಗುರುಪ್ರಸಾದ್, ಮಹದೇವಪ್ಪ, ಸಂಪತ್, ರೈತ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಅಧಿಕ ಭಾರದ ವಾಹನಗಳ ಓಡಾಟಕ್ಕೆ ಬ್ರೇಕ್’
ಅಗತ್ಯಕ್ಕಿಂತ ಹೆಚ್ಚಿನ ಭಾರದ ವಾಹನಗಳು ರಸ್ತೆಯಲ್ಲಿ ಸಂಚರಿಸದಂತೆ ತಡೆಯಬೇಕು ಅಧಿಕ ಭಾರದ ಟಿಪ್ಪರ್ಗಳ ಓಡಾಟ ನಿಯಂತ್ರಿಸಲು ರಸ್ತೆ ಭಾರ ಮಿತಿ ಫಲಕ ಅಳವಡಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಕೊತ್ತಲವಾಡಿ ಹಾಗೂ ಹೆಗ್ಗೋಠಾರ ನಡುವೆ ಆರ್.ಟಿ.ಒ ಚೆಕ್ಪೋಸ್ಟ್ ತೆರೆಯಬೇಕು. ಗಣಿಗಾರಿಕೆ ನಡೆಯುವ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಶೀಘ್ರ ಕ್ವಾರಿ ಹಾಗೂ ಕ್ರಷರ್ ಮಾಲೀಕರ ಸಭೆ ಕರೆದು ಚಿರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.