ಹನೂರು ಪಟ್ಟಣದ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಅನುದಾನ ನೀಡುವಂತೆ ಒತ್ತಾಯಿಸಿ ಸಮುದಾಯದ ಮುಖಂಡರು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿದರು
ಹನೂರು: ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಾಬು ಜಗಜೀವನರಾಂ ಸಮುದಾಯ ಭವನವು ಅಪೂರ್ಣಗೊಂಡಿದ್ದು ಮುಂದುವರೆದ ಕಾಮಗಾರಿಗೆ ಅನುದಾನ ನೀಡುವಂತೆ ಮಾದಿಗ ಸಮುದಾಯದ ಮುಖಂಡರು ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಪಟ್ಟಣದ ಎ.ಜೆ. ಕಾಲೊನಿಯಲ್ಲಿ ₹ 1.50 ಕೋಟಿ ವೆಚ್ಚದಲ್ಲಿ ಜಗಜೀವನ್ ರಾಮ್ ಭವನವನ್ನು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ನಮ್ಮ ಭಾಗದಲ್ಲಿ ಅನೇಕ ಬಡಜನರಿಗೆ ಅನುಕೂಲವಾಗಿದೆ. ಮದುವೆ ಸೇರಿದಂತೆ ಇನ್ನಿತರ ಶುಭ ಕಾರ್ಯಕ್ರಮಗಳು ಇಲ್ಲಿಯೇ ನಡೆಯುತ್ತಿದ್ದು, ಒಂದಷ್ಟು ಕೆಲಸ ಬಾಕಿ ಇದ್ದು, ಈ ಕೆಲಸ ಪೂರ್ಣಗೊಳಿಸಲು ತಾವು ಅನುದಾನ ನೀಡುವ ಮೂಲಕ ಸಹಕಾರ ನೀಡಬೇಕು’ ಎಂದು ಮನವಿ ಪತ್ರ ಸಲ್ಲಿಸಿದರು.
ಹನೂರು ಪಟ್ಟಣ ವ್ಯಾಪ್ತಿಯಲ್ಲಿನ ಬಾಬು ಜಗಜೀವನ್ ರಾಮ್ ಸಮುದಾಯ ಭವನ ನಮ್ಮ ಇಡೀ ಸಮುದಾಯದ ಜನರಿಗೆ ತುಂಬಾ ಅನುಕೂಲವಾಗಿದೆ. ಆದರೆ ಅಡುಗೆ ಕೋಣೆ ಶೌಚಾಲಯ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಕೆಲವು ಮೂಲ ಸೌಲಭ್ಯಗಳು ಇಲ್ಲದೇ ಅನಾನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಅನುದಾನ ನೀಡಿ ಅನುಕೂಲ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಾ. ಎಚ್.ಸಿ. ಮಹದೇವಪ್ಪ, ಸಮುದಾಯದ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಲು ಎಷ್ಟು ಅನುದಾನ ಬೇಕು ಎಂಬುದರ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡು ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಹನೂರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಾಚಪ್ಪ, ಡಾ. ಬಾಬು ಜಗಜೀವನ್ ರಾಂ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಶಿವಮೂರ್ತಿ, ಹನೂರು ತಾಲ್ಲೂಕು ಅಧ್ಯಕ್ಷ ಬೂದಬಾಳು ಮಹದೇವ, ಕಾರ್ಯದರ್ಶಿ ಚೆನ್ನಾಲಿಂಗನಹಳ್ಳಿ ರವಿ, ಹನೂರು ಪಟ್ಟಣ ಪಂಚಾಯಿತಿ ಸದಸ್ಯ ಸುದೇಶ್ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.