ಹನೂರು (ಚಾಮರಾಜನಗರ): ತಾಲ್ಲೂಕಿನ ಮಾರ್ಟಳ್ಳಿಯ ಸೇಂಟ್ ಮೇರಿಸ್ ತಮಿಳು ಮಾಧ್ಯಮದ ಶಿಕ್ಷಕರೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದರಿಂದ ತಾತ್ಕಾಲಿಕವಾಗಿ ಶಾಲೆಗೆ ರಜೆ ಘೋಷಿಸಲಾಗಿದೆ.
ನಾಲ್ಕೈದು ದಿನಗಳ ಹಿಂದೆ ವೃದ್ಧೆಯೊಬ್ಬರು ಇವರ ಮನೆಗೆ ತಮಿಳುನಾಡಿನಿಂದ ಬಂದಿದ್ದರು. ಅವರಿಂದ ಸೋಂಕು ತಗುಲಿರಬಹುದು ಎಂದು ಆರೋಗ್ಯಾಧಿಕಾರಿಗಳು ಅಂದಾಜಿಸಿದ್ದಾರೆ.
ವಿದ್ಯಾರ್ಥಿಗೆ ಸೋಂಕು ತಗುಲಿಲ್ಲ: ಕಾಲೇಜಿನ ವಿದ್ಯಾರ್ಥಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದೆ. ಆದರೆ ಇದು ಸುಳ್ಳು ಎಂದು ಪ್ರಾಂಶುಪಾಲರು ಹೇಳಿದ್ದಾರೆ.
'ನಮ್ಮ ಕಾಲೇಜಿನ ಯಾವುದೇ ವಿದ್ಯಾರ್ಥಿಗೂ ಸೋಂಕು ದೃಢಪಟ್ಟಿಲ್ಲ' ಎಂದು ಕಾಲೇಜಿನ ಉಪನ್ಯಾಸಕ ರಾಬರ್ಟ್ ಧನರಾಜ್ ಪ್ರಜಾವಾಣಿಗೆ ತಿಳಿಸಿದರು.
'ಎರಡು ದಿನಗಳ ಹಿಂದೆ ಶಿಕ್ಷಕರ ಗಂಟಲು ದ್ರವವನ್ನು ಪರೀಕ್ಷೆಗೆ ಸಂಗ್ರಹಿಸಿದ್ದೆವು. ಅವುಗಳ ವರದಿ ಬಂದ ಮೇಲೆ ಶಿಕ್ಷಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿದ್ಯಾರ್ಥಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಇಲ್ಲ. ಶಿಕ್ಷಕರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆ ಮಾಡುತ್ತಿದ್ದೇವೆ' ಎಂದು ಮಾರ್ಟಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ ಅವರು ಪ್ರಜಾವಾಣಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.