ಚಾಮರಾಜನಗರ: ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಚಳಿಗಾಲ ಸಂದರ್ಭದಲ್ಲಿಯೂ ಮುಂದುವರಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಸೂಚಿಸಿದರು.
ಕೋವಿಡ್-19 ಸಂಬಂಧ ಕೈಗೊಂಡಿರುವ ಕ್ರಮಗಳು ಹಾಗೂ ಇತರೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಚಳಿಗಾಲ ಇರುವುದರಿಂದ ಪ್ರಕರಣಗಳು ಉಲ್ಬಣಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೋಂಕಿನ ನಿಯಂತ್ರಣಕ್ಕೆ ಈಗ ಅನುಸರಿಸಲಾಗುತ್ತಿರುವ ಕ್ರಮಗಳನ್ನು ಮುಂದುವರಿಸಬೇಕು’ ಎಂದು ಸೂಚಿಸಿದರು.
ಸೋಂಕಿತರ ಪ್ರಮಾಣ ಹೆಚ್ಚಾಗದಂತೆ ನಿಗಾ ವಹಿಸಬೇಕು. ಜನರಲ್ಲಿಯೂ ಜಾಗೃತಿ ಉಂಟು ಮಾಡಬೇಕು ಎಂದು ಸಲಹೆ ನೀಡಿದರು.
ಸೋಂಕಿತರ ಆರೈಕೆಗಾಗಿ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಕಾವೇರಿ ಅವರು, ಹೆಚ್ಚಿನ ತೊಂದರೆಯಾಗದ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಕಷ್ಟು ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಲು ಕೈಗೊಂಡಿರುವ ಕ್ರಮಗಳನ್ನು ಅವರು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಾತನಾಡಿ, ‘ಇತ್ತೀಚೆಗೆ ಸಂತೇಮರಹಳ್ಳಿಯಲ್ಲಿ 80 ಹಾಸಿಗೆ ಹಾಗೂ ಗುಂಡ್ಲುಪೇಟೆಯಲ್ಲಿ 50 ಹಾಸಿಗೆಗಳ ಸಾಮರ್ಥ್ಯ ಇರುವ ಡೆಡಿಕೇಟೆಡ್ ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದೆ. ಆಮ್ಲಜನಕ ವ್ಯವಸ್ಥೆಯನ್ನು ಮಾಡಲಾಗಿದೆರ. ಕೋವಿಡ್ ಪರೀಕ್ಷೆ ಸಂಖ್ಯೆಯನ್ನೂ ಸಹ ಹೆಚ್ಚಳ ಮಾಡಲಾಗಿದೆ’ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಡಾ. ದಿಲೀಪ್ ಗಿರೀಶ್ ಬದೋಲೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಸರ್ಜನ್ ಡಾ.ಮುರಳೀಕೃಷ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಹೇಶ್, ಡಾ.ಸತೀಶ್ ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.