ಗುಂಡ್ಲುಪೇಟೆ: ಜಮೀನಿನಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದ ವೇಳೆ ಹುಲಿ ನಡೆಸಿರುವ ಘಟನೆ ತಾಲ್ಲೂಕಿನ ಕೆಬ್ಬೇಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹಸು ತೀವ್ರವಾಗಿ ಗಾಯಗೊಂಡಿದೆ.
ಕೆಬ್ಬೇಪುರ ಗ್ರಾಮದ ಗವಿಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಎಂದಿನಂತೆ ನಾಲ್ಕು ಹಸುಗಳನ್ನು ಜಮೀನಿನಲ್ಲಿ ಮೇಯಲು ಬಿಡಲಾಗಿತ್ತು. ಈ ವೇಳೆ ಪೊದೆಯಲ್ಲಿ ಅಡಗಿದ್ದ ಹುಲಿ ಹಸುವಿನ ಮೇಲೆ ದಾಳಿ ನಡೆಸಿದೆ. ಕೂಡಲೇ ಮಾಲೀಕ ಗವಿಸ್ವಾಮಿ ಹಸುವಿನ ರಕ್ಷಣೆಗೆ ಕೂಗಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಹುಲಿ ಹಸು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದೆ. ಆದರೆ ಹಸು ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗಾಯಗಳಾಗಿದೆ.
ಕೆಬ್ಬೇಪುರ ಗ್ರಾಮ ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಹತ್ತಿರವಿದ್ದು, ಆಹಾರ ಅರಸಿ ವನ್ಯಪ್ರಾಣಿಗಳು ಬಂದು ಹೋಗುವುದು ಹೆಚ್ಚಾಗಿದೆ. ಜಮೀನುಗಳಲ್ಲಿ, ಬಂಡಿದಾರಿ ಇತರೆ ಕಡೆಗಳಲ್ಲಿ ಹುಲಿ, ಚಿರತೆ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಇದೀಗ ಗ್ರಾಮದ ಗವಿಸ್ವಾಮಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದೆ. ಆದ್ದರಿಂದ ಗಾಯಗೊಂಡ ಹಸುವಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಿಸಬೇಕು. ಜೊತೆಗೆ ಹುಲಿ ಸೆರೆಗೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಮಾಹಿತಿ ನೀಡಿದರೂ ಸ್ಥಳಕ್ಕಾಗಮಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮೇಲಾಧಿಕಾರಗಳಿಗೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.