ಚಾಮರಾಜನಗರ: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ವಿವಿಧೆಡೆ ತೆರೆಯಲಾಗುವ ಮತಗಟ್ಟೆಗಳ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶನಿವಾರ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಾಮರಾಜನಗರದ ನಗರಸಭೆಯ ಕಚೇರಿಗೆ ಭೇಟಿ ನೀಡಿ ಚುನಾವಣಾ ಸಂಬಂಧ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ತಾಲ್ಲೂಕಿನ ಕಸಬಾ ಹೋಬಳಿಯ ಮಾದಪುರ ಮಂಗಲ ಗ್ರಾಮ ಹಾಗೂ ಸಂತೇಮರಹಳ್ಳಿಗೆ ಭೇಟಿ ನೀಡಿ ಮತಗಟ್ಟೆಗಳ ಸ್ಥಾಪನೆ ಸಂಬಂಧ ವೀಕ್ಷಿಸಿದರು.
ಮತಗಟ್ಟೆಗೆ ಅವಶ್ಯವಿರುವ ಮೂಲಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿ ಮತಗಟ್ಟೆ ತೆರೆಯುವ ವ್ಯವಸ್ಥೆ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಚುನಾವಣೆ ಪ್ರಕ್ರಿಯೆಯನ್ನು ಸುಗಮವಾಗಿ ನಿರ್ವಹಿಸುವ ಸಂಬಂಧ ನಿಯೋಜನೆಗೊಂಡಿರುವ ಮಾಸ್ಟರ್ ಟ್ರೈನರ್ಗಳಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಯವರು ಮಾತನಾಡಿದರು.
‘ಚುನಾವಣಾ ಕಾರ್ಯವನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಪೂರ್ವಸಿದ್ಧತೆ ಹಾಗೂ ತರಬೇತಿ ಪಡೆದು ಚುನಾವಣಾ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಆಸ್ಪತ್ರೆಗೆ ಭೇಟಿ: ಬಳಿಕ ಚಾರುಲತಾ ಅವರು ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿ ಕೋವಿಡ್ ಸಂಬಂಧಿ ಕೈಗೊಳ್ಳಲಾಗಿರುವ ವ್ಯವಸ್ಥೆಗಳು ಹಾಗೂ ಆಮ್ಲಜನಕ ಉತ್ಪಾದಕಾ ಘಟಕವನ್ನು ಪರಿಶೀಲಿಸಿದರು. ಜಿಲ್ಲಾ ಆಸ್ಪತ್ರೆಯ ಕೋವಿಡ್ ನೋಡೆಲ್ ಅಧಿಕಾರಿ ಡಾ. ಮಹೇಶ್ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.