ಚಾಮರಾಜನಗರ:ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಗಾಗಿ ಭೂಮಿ ಮಾರಾಟ ಮಾಡಲು ಮುಂದೆ ಬಂದಿರುವ ಭೂ ಮಾಲೀಕರಿಂದ ಭೂಮಿ ಖರೀದಿಸುವ ಪ್ರಕ್ರಿಯೆ ತ್ವರಿತಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಭೂ ಒಡೆತನ ಯೋಜನೆಯ ಅನುಷ್ಠಾನ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು,ಯೋಜನೆ ಅನುಷ್ಠಾನಗೊಳಿಸುವಲ್ಲಿ ನಿಯಮಾನುಸಾರ ಎಲ್ಲ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಜಮೀನು ಕೃಷಿ ವ್ಯವಸಾಯಕ್ಕೆ ಯೋಗ್ಯವಾಗಿರುವ ಸಂಬಂಧ ಕೃಷಿ ಇನ್ನಿತರ ಇಲಾಖೆಗಳಿಂದ ವರದಿಯನ್ನು ಪಡೆದುಕೊಂಡಿರಬೇಕು.ಫಲಾಪೇಕ್ಷಿಗಳಿಗೆ ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು’ ಎಂದರು.
ವಿಳಂಬ ಸಹಿಸುವುದಿಲ್ಲ:ಸಭೆಯಲ್ಲಿ ಭೂ ಮಾಲೀಕರೊಂದಿಗೆ ದರ ನಿಗದಿ ಸಂಭಂಧ ಚರ್ಚಿಸುವ ವೇಳೆ ಭೂ ಮಾಲೀಕರೊಬ್ಬರು ನಿಗಮದ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಗಮನ ಸೆಳೆದರು.
ಕೂಡಲೇ ಸ್ಪಂದಿಸಿದ ಎಂ.ಆರ್.ರವಿ ಅವರು, ‘ನಿಗಮದ ಕಾರ್ಯ ವೈಖರಿಯಲ್ಲಿ ವಿಳಂಬ ಧೋರಣೆಯನ್ನು ಸಹಿಸಲಾಗುವುದಿಲ್ಲ. ಇಂತಹ ದೂರುಗಳಿಗೆ ಅವಕಾಶವಾಗಬಾರದು. ನಿಗಮದ ಕಾರ್ಯಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಲೋಪಕ್ಕೆ ಅವಕಾಶವಾದರೆ ಸಂಬಂಧ ಪಟ್ಟವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಸಿದರು.
ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸುವ ನಿಗಮಗಳ ಅಧಿಕಾರಿ ಸಿಬ್ಬಂದಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ನೊಂದಣಾಧಿಕಾರಿ ಹಂಸವೇಣಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಜೆ. ಪ್ರಮೋದ್ ಕುಮಾರ್, ಇತರೆ ಇಲಾಖೆ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.