ADVERTISEMENT

ವಿವಿಧ ಗ್ರಾ.ಪಂ.ಗೆ ಡಿ.ಸಿ ಭೇಟಿ; ಚುನಾವಣಾ ಸಿದ್ಧತೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 14:25 IST
Last Updated 9 ಡಿಸೆಂಬರ್ 2020, 14:25 IST
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದರು
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದರು   

ಚಾಮರಾಜನಗರ: ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಡಾ.ಎಂ.ಆರ್.ರವಿ ಅವರು ಬುಧವಾರ ಭೇಟಿ ನೀಡಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಚಾಮರಾಜನಗರ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ, ಬೇಗೂರು, ಕಬ್ಬಳ್ಳಿ, ಸೋಮಳ್ಳಿ, ಬಲಚವಾಡಿ, ರಾಘವಾಪುರ, ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿಯಗಳಿಗೆ ಅವರು ಭೇಟಿ ನೀಡಿದರು.ಚುನಾವಣೆ ಕಾರ್ಯವನ್ನು ಲೋಪವಿಲ್ಲದೇ ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

‘ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಶಿಸ್ತು ಬದ್ಧವಾಗಿ ನಿರ್ವಹಿಸಬೇಕು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಅಭ್ಯರ್ಥಿಗಳು ಹಾಗೂ ಅವರ ಪರವಾಗಿ ಬರುವ ಸೂಚಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಅಂತರ ಕಾಯ್ದು ಕೊಳ್ಳಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿಯ ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಬೇಕು. ನಾಮಪತ್ರ ಸ್ವೀಕರಿಸಿದ ದಿನಾಂಕ ಹಾಗೂ ಸಮಯವನ್ನು ತಪ್ಪದೇ ಸ್ಪಷ್ಟವಾಗಿ ನಮೂದಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ADVERTISEMENT

‘ಪ್ರತಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂಭಾಗದಲ್ಲಿ ಚುನಾವಣೆಯ ಕ್ಷೇತ್ರಗಳು ಮತ್ತು ಸ್ಥಾನಗಳ ಸಂಖ್ಯೆಯನ್ನು ಸಾರ್ವಜನಿಕರು ತಿಳಿಯುವಂತೆ ಪ್ರದರ್ಶಿಸಬೇಕು. ನಾಮಪತ್ರ ಸ್ವೀಕೃತಿ ಸಂಬಂಧ ರಿಜಿಸ್ಟರ್ ನಿರ್ವಹಣೆ ಮಾಡಬೇಕು.ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಆಮಿಷವೊಡ್ಡುವುದು, ನೀತಿ ಸಂಹಿತೆ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಬೇಕು. ನೀತಿ ಸಂಹಿತೆ ಪಾಲನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಡಾ.ಎಂ.ಆರ್.ರವಿ ಅವರು ಸಲಹೆ ನೀಡಿದರು.

‘ಮತಗಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಖಾತ್ರಿ ಪಡಿಸಿಕೊಳ್ಳಬೇಕು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಸಬೇಕು. ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಗುಂಡ್ಲುಪೇಟೆ ತಾಲ್ಲೂಕು ತಹಶೀಲ್ದಾರ್ ನಂಜುಂಡಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿ.ಪಿ.ಕುಲದೀಪ್ ಇತರೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.