
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹರದನಹಳ್ಳಿ ಪಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹರದನಹಳ್ಳಿ ಪಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಮಧುಮೇಹ ದಿನಾಚರಣೆ ನಡೆಯಿತು.
ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮಾಧಿಕಾರಿ ಡಾ.ಸುಂದರೇಶ್ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿಯೇ ಮೊದಲ ಡಯಾಬಿಟಿಕ್ ಕ್ಲಿನಿಕ್ ಜಿಲ್ಲೆಯಲ್ಲಿ ಆರಂಭವಾಗಿದೆ. ಪ್ರತಿ ಬುಧವಾರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ ತಪಾಸಣೆ ನಡೆಸಲಾಗುತ್ತಿದೆ. ತಪಾಸಣೆಯ ಜೊತೆಗೆ ಮಧುಮೇಹ ರೋಗಿಗಳಿಗೆ ಸಲಹೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗುರುರಾಜ್ ಹಿಂದೆ ಸಕ್ಕರೆ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿರಲಿಲ್ಲ. ಈಚೆಗೆ ಶ್ರಮರಹಿತ ಜೀವನ ಹಾಗೂ ದೈಹಿಕ ಚಟುವಟಿಕೆಗಳು ಕಡಿಮೆಯಾಗಿರುವುದು ಮಧುಮೇಹ ರೋಗ ಹೆಚ್ಚಾಗಲು ಕಾರಣವಾಗಿದೆ.
‘ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ’ ಎಂಬ ಹಿರಿಯರ ನಾಣ್ಣುಡಿಯಂತೆ ಜನರು ಹಸಿರು ಸೊಪ್ಪು, ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿಸಿ ಆರೋಗ್ಯವಂತರಾಗಿರಬೇಕು. ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಜನರಲ್ಲಿ ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ನ.14ರಂದು ವಿಶ್ವ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದೆ. ಜನರು ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಿ ಶ್ರಮರಹಿತ ಜೀವನಕ್ಕೆ ಒಗ್ಗಿಕೊಳ್ಳುತ್ತಿರುವುದು, ಅತಿಯಾದ ಜಂಕ್ ಫುಡ್ಗಳ ಸೇವನೆಯಿಂದ ಮಧುಮಹ ಹೆಚ್ಚಾಗುತ್ತಿದೆ ಎಂದರು.
ಸಮುದಾಯ ಆರೋಗ್ಯಾಧಿಕಾರಿ ಸೌಜನ್ಯಾ, ಶುಶ್ರೂಷ ಅಧಿಕಾರಿ ರಾಜೇಶ್ವರಿ, ಲಕ್ಷ್ಮೀ, ಆರೋಗ್ಯ ಸಿಬ್ಬಂದಿ ಮಹದೇವಸ್ವಾಮಿ ಉಪಸ್ಥಿತರಿದ್ದರು.
‘ವ್ಯಾಯಾಮಸತ್ವಯುತ ಆಹಾರ ರೂಢಿಸಿ’
ರಕ್ತದಲ್ಲಿ ಗ್ಲೂಕೋಸ್ ಉತ್ಪಾದನೆ ಹೆಚ್ಚಾಗಿ ಇನ್ಸುಲಿನ್ ಉತ್ಪಾದನೆ ಕಡಿಮೆಯಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಜನರ ಜೀವನ ಶೈಲಿಯಲ್ಲಿ ಆಗಿರುವ ಬದಲಾವಣೆ ಆಹಾರ ಪದ್ಧತಿಯ ಬದಲಾವಣೆಯಿಂದಲೂ ಮಧುಮೇಹ ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳು ಇರಬೇಕು ಯೋಗ ವ್ಯಾಯಾಮ ನಡಿಗೆ ಓಟ ರೂಢಿಸಿಕೊಳ್ಳಬೇಕು. ಸತ್ವಭರಿತ ಆಹಾರ ಪದಾರ್ಥಗಳನ್ನು ಸೇವನೆಯುಇಂದ ಮಧುಮೇಹ ಕಾಯಿಲೆಯಿಂದ ದೂರ ಇರಬಹುದು ಎಂದು ಡಾ.ಸುಂದರೇಶ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.