ಕೊಳ್ಳೇಗಾಲ: ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವೆಂಕಟೇಶ್ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಯೊಂದು ರೋಗಿಯ ವಾರ್ಡ್ ಹಾಗೂ ಆಸ್ಪತ್ರೆಯ ಕೊಠಡಿಗಳನ್ನು ವೀಕ್ಷಣೆ ಮಾಡಿ ಕೆಲಕಾಲ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು.
ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ರೋಗಿಗಳ ಕಷ್ಟ ಸುಖಗಳಿಗೆ ಸ್ಪಂದಿಸಬೇಕು. ಆಗ ಆಸ್ಪತ್ರೆ ಜೊತೆಗೆ ವೈದ್ಯರಿಗೂ ಉತ್ತಮವಾದ ಹೆಸರು ಬರುತ್ತದೆ. ಈಗಾಗಲೇ ಆಸ್ಪತ್ರೆ ವೀಕ್ಷಣೆ ಮಾಡಿದ್ದೇನೆ. ಎಲ್ಲವೂ ಸಹ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನದಾಗಿ ಸ್ವಚ್ಛತೆ ಕಾಪಾಡಬೇಕು ಎಂದು ಸಲಹೆ ನೀಡಿದರು.
ವೈದ್ಯರು ರೋಗಿಗಳಿಗೆ ಹೊರಗಿನ ಔಷಧಿ ಚೀಟಿಗಳನ್ನು ಹೆಚ್ಚಾಗಿ ಬರೆಯಬಾರದು. ನಮ್ಮಲ್ಲಿ ಎಲ್ಲಾ ವಿಧವಾದ ಔಷಧಿಗಳು ಇವೆ. ಹಾಗಾಗಿ ನಮ್ಮ ಔಷಧಗಳನ್ನೇ ನೀಡಿ ಅವರನ್ನು ಗುಣವಾಗುವಂತೆ ನೋಡಿಕೊಳ್ಳಬೇಕು. ತುರ್ತು ವಿಭಾಗ ಕೊಠಡಿಯಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ವೈದ್ಯರು ಗಮನಹರಿಸಬೇಕು. 24*7 ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇರಬೇಕು. ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ವೈದ್ಯಾಧಿಕಾರಿ ಡಾ.ಚಿದಂಬರಂ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೊಳ್ಳೇಗಾಲಕ್ಕೆ ₹128 ಕೋಟಿ ಅನುದಾನದಲ್ಲಿ ಜಿಲ್ಲಾಸ್ಪತ್ರೆಗೆ ಅನುಮೋದನೆ ಬಂದಿದೆ. ಹಾಗಾಗಿ ಕೂಡಲೇ ಕಾಮಗಾರಿ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುತ್ತೇವೆ ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಬಸವರಾಜು, ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಜ್ ಶೇಖರ್, ಡಾ.ದಿಲೀಪ್, ಡಾ.ಲೋಕೇಶ್ವರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.