ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ ಶಾಸಕ ಪುಟ್ಟರಂಗಶೆಟ್ಟಿ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಿದರು.
ಚಾಮರಾಜನಗರ: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ತಾಲ್ಲೂಕಿನ ಹಲವು ಸರ್ಕಾರಿ ಶಾಲಾ ಮಕ್ಕಳಿಗೆ 85 ಲಕ್ಷ ಮೌಲ್ಯದ ನೋಟ್ ಪುಸ್ತಕಗಳನ್ನು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕರೂ ಆದ ಸಿ.ಪುಟ್ಟರಂಗಶೆಟ್ಟಿ ವಿತರಿಸಿದರು.
ತಾಲ್ಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ 1ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ಗಳನ್ನು ವಿತರಣೆ ಮಾಡಲಾಯಿತು.
ಚಂದಕವಾಡಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನೋಟ್ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಎಂಎಸ್ಐಎಲ್ ಸರ್ಕಾರದ ಅಂಗಸಂಸ್ಥೆಯಾಗಿದ್ದು ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿಗೆ ಪೂರಕವಾಗಿ ನೆರವು ನೀಡುತ್ತಾ ಬಂದಿದೆ. ಕಳೆದ ಬಾರಿಯೂ ತಾಲ್ಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್ ವಿತರಿಸಲಾಗಿತ್ತು. ಈ ಬಾರಿಯೂ ವಿತರಿಸಲಾಗುತ್ತಿದ್ದು ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಇಂದಿರಾಗಾಂಧಿ ಹಾಗೂ ಡಿ.ದೇವರಾಜ ಅರಸು 20 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಒತ್ತು ನೀಡಿದ್ದರು. ರಾಜ್ಯ ಸರ್ಕಾರ ಕೂಡ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ಮಕ್ಕಳ ಪರಿಣಾಮಕಾರಿ ಕಲಿಕೆಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಶಾಲೆಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರದೊಂದಿಗೆ ಎಂ.ಎಸ್.ಐ.ಎಲ್ ಕೂಡ ಕೈಜೋಡಿಸಿದ್ದು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ತಾಲ್ಲೂಕಿನ ಕೆಲವೆಡೆ ಬಸ್ ನಿಲ್ದಾಣ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಶಾಲಾ ಕಟ್ಟಡಗಳ ನವೀಕರಣಕ್ಕೂ ಆದ್ಯತೆ ನೀಡಿದೆ ಎಂದು ಶಾಸಕರು ಹೇಳಿದರು.
ಎಂ.ಎಸ್.ಐ.ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ಕುಮಾರ್ ಮಾತನಾಡಿ ಸಂಸ್ಥೆಯು 60 ವರ್ಷಗಳಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಓದಿನತ್ತ ಗಮನ ಹರಿಸಬೇಕು. ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ನಂತರ ಮಂಗಲ ಗಾಮದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಸಕರು ನೋಟ್ಬುಕ್ ವಿತರಿಸಿ ಮಾತನಾಡಿ, ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು, ಕೃಷಿ, ಪಾಲಿಟೆಕ್ನಿಕ್ ಕಾಲೇಜುಗಳು ಜಿಲ್ಲೆಯಲ್ಲಿದ್ದು ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ 43 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ಆರಂಭಿಸಲು ಮಂಗಲದ ಶಂಕರದೇವರ ಬೆಟ್ಟದ ತಪ್ಪಲಿನಲ್ಲಿ ಜಾಗ ಗುರುತಿಸಲಾಗಿದೆ. ಮಂಗಲ, ಕೋಳಿಪಾಳ್ಯ ಹಾಗೂ ನಂಜದೇವನಪುರದ ಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಉನ್ನತೀಕರಿಸಲಾಗುತ್ತಿದೆ ಎಂದರು.
ಚಂದಕವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಟರಾಜು, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ಸೋಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಚಂದ್ರಶೇಖರ್, ಎಂಎಸ್ಐಎಲ್ ಮಾರ್ಕೆಟಿಂಗ್ ನಿರ್ದೇಶಕ ಎ.ಎಂ. ಚಂದ್ರಪ್ಪ, ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಬಸವರಾಜು, ಮೈಸೂರು ಶಾಖಾ ಮುಖ್ಯಸ್ಥ ಶಂಕರಯ್ಯ, ಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಉಪಾಧ್ಯಕ್ಷೆ ಸುಮಾ, ಸದಸ್ಯರಾದ ಸುರೇಶ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣಸ್ವಾಮಿ ಇದ್ದರು.
‘ಅಭಿವೃದ್ಧಿ ಕಾರ್ಯಗಳಿಗೆ ಒತ್ತು’:
ಆಲೂರಿನ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಶಾಸಕರು ‘ನಂಜುಂಡಪ್ಪ ವರದಿ ಅನ್ವಯ ರಾಜ್ಯದ 39 ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾಗಿರುವ ಚಾಮರಾಜನಗರ ಈಚೆಗೆ ಅಭಿವೃದ್ಧಿ ಕಾಣುತ್ತಿದೆ. ನದಿಮೂಲದಿಂದ ನೀರಿನ ಅಲಭ್ಯತೆಯಿಂದ ಕುಡಿಯುವ ನೀರು ಪೂರೈಕೆಗೆ 250 ಬೋರ್ವೆಲ್ ಕೊರೆಸಲಾಗಿದೆ. ಸುತ್ತೂರು ಹಾಗೂ ಆಲಂಬೂರು ಏತ ನೀರಾವರಿ ಯೋಜನೆಯಿಂದ ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಲಾಗಿದೆ’ ಎಂದರು.
ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದುಂಡಮ್ಮ ಸದಸ್ಯರಾದ ದೊಡ್ಡಸ್ವಾಮಿ ಮಹದೇವಸ್ವಾಮಿ ತಾಲೂಕು ಕೃಷಿ ಉತ್ಪನ್ನ ಮಆರುಕಟ್ಟೆ ಸದಸ್ಯರಾದ ಪ್ರದೀಪ್ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕುಮಾರ್ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ನಂಜುAಡಸ್ವಾಮಿ ಎಂ.ಎಸ್.ಐ.ಎಲ್ ಅಧಿಕಾರಿಗಳು ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.