ADVERTISEMENT

ಪಕ್ಷದ ಒಳ್ಳೆ ಸಂಗತಿ ಹೊರಗೆ ಹೇಳಬೇಕು, ಉಳಿದಿದ್ದು ನಮ್ಮಲ್ಲೇ ಚರ್ಚೆಯಾಗಬೇಕು: ಸಚಿವ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 9:39 IST
Last Updated 2 ಏಪ್ರಿಲ್ 2021, 9:39 IST
ಎಸ್‌. ಸುರೇಶ್‌ ಕುಮಾರ್
ಎಸ್‌. ಸುರೇಶ್‌ ಕುಮಾರ್   

ಚಾಮರಾಜನಗರ: ‘ಪಕ್ಷದಲ್ಲಿನ ಒಳ್ಳೆಯ ಸಂಗತಿಗಳನ್ನು ಹೊರಗಡೆ ಹೇಳಬೇಕು. ಒಳ್ಳೆಯ ಸಂಗತಿ ಅಲ್ಲದಿರುವುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಶುಕ್ರವಾರ ಹೇಳಿದರು.

ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲ ಹಾಗೂ ಪಕ್ಷದ ವರಿಷ್ಠರಿಗೆ ಬರೆದಿರುವ ಪತ್ರದ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಸಚಿವ ಈಶ್ವರಪ್ಪ ಅವರು ಪತ್ರ ಬರೆದಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನ್ನ ಅಭಿಪ್ರಾಯವನ್ನು ಪಕ್ಷದ ವೇದಿಕೆಯಲ್ಲಿ ತಿಳಿಸುತ್ತೇನೆ’ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗೆ 15 ದಿನ ರಜೆ

ADVERTISEMENT

‘ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ 15 ದಿನಗಳ ಕಾಲ ರಜೆ ನೀಡಲಾಗಿದೆ’ ಎಂದು ಸುರೇಶ್‌ ಕುಮಾರ್‌ ಅವರು ಹೇಳಿದರು.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಮುಂದಿನ 15 ದಿನಗಳು ನಿರ್ಣಾಯಕ ಆಗಿರುವುದರಿಂದ ಈ ಅವಧಿಯಲ್ಲಿ ರಜೆ ನೀಡಲು ತೀರ್ಮಾನಿಸಲಾಗಿದೆ. ಇದು ಬೆಂಗಳೂರಿಗೆ ಮಾತ್ರ ಅನ್ವಯವಾಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.

‘ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.