ಹನೂರು: ಮಲೆಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯದಲ್ಲಿ ಶುಕ್ರವಾರ ಒಂಟಿ ಸಲಗದ ಕಳೇಬರ ಪತ್ತೆಯಾಗಿದೆ.
ಬಫರ್ ವಲಯ ವ್ಯಾಪ್ತಿಯ ಒಂಟ ಮಾಲಾಪುರ ಗ್ರಾಮದ ಸಮೀಪ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಮೃತದೇಹ ಕಂಡುಬಂದಿದೆ. ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಮಹಜರು ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮೃತಪಟ್ಟಿರುವ ಆನೆಗೆ ಸುಮಾರು 60 ವಯಸ್ಸಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.
ಹಲವು ದಿನಗಳಿಂದ ಈ ಆನೆ ಬಫರ್ ವಲಯದಲ್ಲೇ ಅಡ್ಡಾಡುತ್ತಿತ್ತು ಎಂದು ಸಿಬ್ಬಂದಿ ಹೇಳುತ್ತಾರೆ. ನೀರು ಮತ್ತು ಆಹಾರದ ಕೊರತೆಯಿಂದಲೂ ಮೃತಪಟ್ಟಿರಬಹುದು ಎಂಬ ಆರೋಪವೂ ಕೇಳಿ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಲೆಮಹದೇಶ್ವರ ವನ್ಯಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ‘ಆನೆ ಸುಮಾರು ನಾಲ್ಕೈದು ದಿನಗಳ ಹಿಂದೆ ಮೃತಪಟ್ಟಿರಬಹುದು. ಎರಡು ದಿನದ ಹಿಂದೆ ಗೊತ್ತಾಗಿದೆ. ಮೇಲ್ನೋಟಕ್ಕೆ ಸಹಜ ಸಾವು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.