ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ರಿಂದ ಜಾರಿಗೆ ಬರುವಂತೆ ಜಿಲ್ಲಾದ್ಯಂತ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ವಾರದಲ್ಲಿ 4 ದಿನಗಳ ಕಾಲ ವೈದ್ಯಕೀಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಪರಿಷ್ಕರಿಸಿದ್ದಾರೆ.
ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಹಾಲು ವಿತರಣೆ, ಹಾಲಿನ ಬೂತ್, ಹಣ್ಣು, ತರಕಾರಿ ಅಂಗಡಿಗಳು, ತಳ್ಳುವ ಗಾಡಿಗಳಲ್ಲಿ ತರಕಾರಿ ಹಾಗೂ ಹಣ್ಣುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೆಟ್ರೋಲ್ ಬಂಕ್, ಪಡಿತರ ಅಂಗಡಿಗಳು, ಹೋಟೆಲ್ ಪಾರ್ಸಲ್ ಸೇವೆ ಹಾಗೂ ಹೋಂ ಡೆಲಿವರಿ, ಪಶು ವೈದ್ಯಕೀಯ ಸೇವೆಗಳು, ಕೃಷಿ ಚಟುವಟಿಕೆಗಳು, ಕಟ್ಟಡ, ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಮುಂಬರುವ ರಂಜಾನ್ ಹಬ್ಬದ ದಿನದಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾಂಸದ ಅಂಗಡಿಗಳನ್ನು ತೆರೆಯಲು ಹಾಗೂ ಜಿಲ್ಲೆಯ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಇಲ್ಲೆಲ್ಲ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.