
ಗುಂಡ್ಲುಪೇಟೆ: ಪ್ರತಿಯೊಬ್ಬರೂ ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ದೃಷ್ಟಿ ಬಗ್ಗೆ ಗಮನ ನೀಡಬೇಕೆಂದು ವೀರಶೈವ-ಲಿಂಗಾಯತ ಮಹಾಸಭಾ ನಿರ್ದೇಶಕ ಎಚ್.ಎಂ.ನಂದೀಶ್ ಸಲಹೆ ನೀಡಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಅನುಗ್ರಹ ಫೌಂಡೇಶನ್, ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಬಡಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಪ್ರತಿ ತಿಂಗಳು ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗುತ್ತಿದೆ. ಇತ್ತೀಚೆಗೆ ಬಹುಪಾಲು ಜನರಿಗೆ ಕಣ್ಣಿನ ಸಮಸ್ಯೆಗಳು ಹೆಚ್ಚುತ್ತಿದ್ದು, ಇದರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಅರವಿಂದ ಕಣ್ಣಿನ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ವಿಜಯಕಾಂತ್ ಮಾತನಾಡಿ, ದಾನಿಗಳ ಕೊಡುಗೆಯಿಂದ ಲಕ್ಷಾಂತರ ಬಡ ಜನರಿಗೆ ದೃಷ್ಟಿ ಬರುವಂತಾಗಿದೆ. ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಕಣ್ಣು ಪ್ರತಿಯೊಬ್ಬರಿಗೂ ಅಮೂಲ್ಯವಾದ ಅಂಗವಾಗಿದೆ. ಆ ಕಣ್ಣಿನ ಆರೋಗ್ಯ ಬಹಳ ಮುಖ್ಯವಾಗಿದೆ. ತುಳಿತಕ್ಕೆ ಒಳಗಾದವರ ಹಾಗೂ ಬಡಜನರ ಆರೋಗ್ಯ ಪೂರ್ಣ ಜೀವನಕ್ಕಾಗಿ ಸಮಾಜ ಸೇವಾ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಕೊಂಡಾಗ ಮಾತ್ರ ಜೀವನ ಸಾರ್ಥಕತೆಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಪ್ರತಿ ಕುಟುಂಬದಲ್ಲೂ ಹಿರಿಯ ಮುಖಂಡರು ಕಣ್ಣಿನ ತೊಂದರೆಯಿಂದ ಬಳಲುತ್ತಿದ್ದಾರೆ. ಅಂತಹವರು ತಿಂಗಳ ಪ್ರತಿ ಮೊದಲ ಶನಿವಾರ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆಯುವ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮವನ್ನು ಪಟ್ಟಣದ ಪೊಲೀಸ್ ಠಾಣೆಯ ಎಸ್ಐ ನರೇಶ್ ಕುಮಾರ್, ಉದ್ಯಮಿ ಪ್ರದೀಪ್, ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ಮಹದೇವಸ್ವಾಮಿ, ಜಿಲ್ಲಾ ಸಂಚಾಲಕ ರಾ.ಬಾಬು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.