ಚಾಮರಾಜನಗರ: ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯತ್ನಿಸುತ್ತಿವೆ ಎಂದು ಆರೋಪಿಸಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಸೋಮವಾರ ಮೈಸೂರಿಗೆ ತೆರಳಲು ಯತ್ನಿಸಿದ ರೈತ ಸಂಘಗಳ ಮುಖಂಡರನ್ನು ಪೊಲೀಸರು ನಗರದ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದರು.
ಮಧ್ಯಾಹ್ನ 3.30ರ ತಿರುಪತಿ ಎಕ್ಸ್ಪ್ರೆಸ್ ರೈಲಿನಲ್ಲಿ ಮೈಸೂರಿಗೆ ತೆರಳಲು ರೈತ ಸಂಘಗಳ ಎರಡೂ ಬಣಗಳ ಮುಖಂಡರು, ಕಾರ್ಯಕರ್ತರು ನಿರ್ಧರಿಸಿದ್ದರು. ಇದನ್ನು ಅರಿತ ಪೊಲೀಸರು ರೈಲ್ವೆ ನಿಲ್ದಾಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು.
ತಾಲ್ಲೂಕು ಕೇಂದ್ರಗಳಲ್ಲೂ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ರೈತರನ್ನು ಬರಲು ಬಿಡಲಿಲ್ಲ.
ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಹಾಗೂ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ ಸೇರಿದಂತೆ ಎರಡೂ ಸಂಘಟನೆಗಳ 11 ಮಂದಿಯಷ್ಟೇ ಇದ್ದರು.
ಮಧ್ಯಾಹ್ನ 2.30ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಬಂದ ಮುಖಂಡರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ರೈತ ಸಂಘದ ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದಾಗ ಅವರಿಗೆ ಭದ್ರತೆ ಕೊಟ್ಟಿಲ್ಲ. ಅವರ ಮೇಲೆ ಕಪ್ಪು ಮಸಿ ಎರಚಿ, ಹಲ್ಲೆ ಮಾಡಿ ಅವರಿಗೆ ಅವಮಾನ ಮಾಡಿ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯತ್ನಿಸುತ್ತಿವೆ’ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ, ರಾಜ್ಯ ಸರ್ಕಾರ ಇನ್ನೂ ಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಗೋ ಬ್ಯಾಕ್ ಮೋದಿ’ ಎಂದು ಘೋಷಣೆ ಕೂಗಿದ ಪ್ರತಿಭಟನಕಾರರು, ರೈಲು ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಮುಖಂಡರನ್ನು ತಡೆದ ಪೊಲೀಸರು, ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.
ರೈತ ಮುಖಂಡರಾದ ಹೊನ್ನೂರು ಬಸವಣ್ಣ, ಕಾಡಹಳ್ಳಿ ಚಿನ್ನಸ್ವಾಮಿ, ಮೂಡ್ನಾಕೂಡು ಮಹೇಶ್, ಗೌಡೇಗೌಡ, ಕಲ್ಪುರ ರಘು, ಕಲ್ಪುರ ಪಾಪು, ಹಳೇಪುರ ಲೋಕೇಶ್, ಹೆಗ್ಗವಾಡಿಪುರ ಮಹದೇವಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.