ಚಾಮರಾಜನಗರ: ರೈತ ಸಂಘಟನೆಗಳು ಹಾಗೂ ರೈತ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶರವಣನ್ ಅವರನ್ನು ರಾಜ್ಯದಿಂದ ಬೇರೆಕಡೆಗೆ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ರೈತ ಸಂಘಟನೆಗಳ ಮುಖಂಡರು ಐದನೇ ದಿನವಾದ ಶುಕ್ರವಾರು ಪ್ರತಿಭಟನೆ ಮುಂದುವರೆಸಿದರು.
ಇಡೀ ದಿನ ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಮುಂದೆ ಕುಳಿತ ಪ್ರತಿಭಟನಕಾರರು ಜಿಲ್ಲಾಡಳಿತ ಹಾಗೂ ಸಕ್ಕರೆ ಕಾರ್ಖಾನೆ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ಶರವಣನ್ ಅವರನ್ನು ವರ್ಗಾವಣೆ ಮಾಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
ಪ್ರತಿಭಟನೆ ಮುಂದುವರೆದಿರುವ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು, ‘ಉಪಾಧ್ಯಕ್ಷರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಒಕ್ಕಣೆ ಇರುವಂತಹ ಪತ್ರವನ್ನು ನಮಗೆ ನೀಡಲಾಗಿದೆ. ಅದು ಇಂಗ್ಲಿಷ್ನಲ್ಲಿದೆ. ನಾವು ಕನ್ನಡದಲ್ಲಿ ಪತ್ರ ಕೊಡುವಂತೆ ಕೇಳಿದ್ದೇವೆ. ಅದಲ್ಲದೇ, ಈಗ ನೀಡಿರುವ ಪತ್ರದಲ್ಲಿ ಅವರು ಯಾವಾಗ ಹುದ್ದೆಯಿಂದ ನಿರ್ಗಮಿಸಲಿದ್ದಾರೆ ಎಂಬುದನ್ನು ಉಲ್ಲೇಖಿಸಿಲ್ಲ. ಹಾಗಾಗಿ, ಅವರು ವರ್ಗಾವಣೆ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದರು.
ಪ್ರಕಾಶ್ ಕಬ್ಬು ಬೆಳಗಾರರ ಸಂಘದ ಮೈಸೂರು–ಚಾಮರಾಜನಗರ ಘಟಕದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಮುಖಂಡರಾದ ಮಾಡ್ರಳ್ಳಿ ಮಹದೇವಪ್ಪ, ಬಸವಣ್ಣ, ಕುಮಾರ್, ಅಂಬಳೆ ಮಂಜುನಾಥ್ ಕುರುಬೂರು ಮಂಜೇಶ್, ಆದ್ಯ ರವಿ, ಮಲ್ಲೇಶ್, ಮೂಕಳ್ಳಿ ಮಹದೇವಸ್ವಾಮಿ, ಹೆಗ್ಗೋಠಾರ ಶಿವಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.