
ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ 10ನೇ ದಿನವೂ ಮುಂದುವರಿದಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸೆಸ್ಕ್ ಎಂಡಿ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ತಾಲ್ಲೂಕು ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖರು ಧರಣಿ ನಡೆಸುತ್ತಿದ್ದರುರೂ ದಪ್ಪ ಚರ್ಮದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಸಮಸ್ಯೆ ಆಲಿಸಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರೈತ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ 10 ದಿನಗಳಿಂದ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸುತ್ತಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬರದೆ ನಿರ್ಲಕ್ಷ್ಯ ವಹಿಸಿರುವುದು, ಬೇಜವಾಬ್ದಾರಿತನದ ನಡೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಸೆಸ್ಕ್ ಎಂಡಿ ಕೂಡಲೇ ಧರಣಿ ಜಾಗಕ್ಕೆ ಬಂದು ನಮ್ಮ ಸಮಸ್ಯೆ ಆಲಿಸದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ಎಚ್ಚರಿಸಿದರು.
‘ಸಾಗುವಳಿ ಪತ್ರ ವಿತರಣೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಕೇಳಿದರೆ ತಹಶೀಲ್ದಾರ್ ತನ್ಮಯ್ ಧರಣಿ ಸ್ಥಳಕ್ಕೆ ಭೇಟಿ ನೀಡದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲವಾದರೆ ತಾಲ್ಲೂಕು ಬಿಟ್ಟು ತೊಲಗಲಿ ಎಂದು ಒತ್ತಾಯಿಸಿದರು. ಶಾಸಕ ಗಣೇಶಪ್ರಸಾದ್ ಕೂಡಲೇ ಸಾಗುವಳಿ ಸಮಿತಿ ಸಭೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಸಾಗುವಳಿ ಪತ್ರ ನೀಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್, ಬೊಮ್ಮನಹಳ್ಳಿ ಲೋಕೇಶ್, ರಘು, ನಾಗರಾಜಪ್ಪ, ಬಸವೇಶ, ನಾಗರಾಜು, ಮಹಿಳಾ ತಾಲೂಕು ಅಧ್ಯಕ್ಷೆ ಬಸಮ್ಮ, ಸುರೇಶ್, ಸುರೇಶ ಪಡಗೂರು, ಸೋಮಶೇಖರ್, ಪ್ರಸಾದ್, ಹಕ್ಕಲಪುರ ಕುಮಾರ್, ಬಲಚಲವಾಡಿ ಮಹೇಶ್, ಭೀಮನಬೀಡು ಬಾಲಕೃಷ್ಣ, ಮಳವಳ್ಳಿ ಮಹೇಶ್, ಅಂಕಪ್ಪ, ಮಹೇಂದ್ರ, ಮಹದೇವಸ್ವಾಮಿ, ಕೆಂಪ, ರೈತ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.