ಚಾಮರಾಜನಗರ: ತಾಲ್ಲೂಕಿನ ಉಮ್ಮತ್ತೂರು ಗ್ರಾಮದ ಗುಡ್ಡಕ್ಕೆ ಮಂಗಳವಾರ ಬೆಂಕಿ ಬಿದ್ದಿದ್ದು, ಹತ್ತಾರು ಎಕರೆ ಕಾಡು ಭಸ್ಮವಾಗಿದೆ.
ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಜೊತೆ ಸೇರಿ ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ. ಆದರೆ, ರಾತ್ರಿವರೆಗೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ.
ಗುಡ್ಡದಲ್ಲಿಕುರುಚಲು ಗಿಡಗಳಿಂದ ಹಿಡಿದು ಮಧ್ಯಮ ಗಾತ್ರದ ಗಿಡ ಮರಗಳಿವೆ. ಮಂಗಳವಾರ ಮಧ್ಯಾಹ್ನವೇ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ.
‘ನೂರಾರು ಎಕರೆಯಲ್ಲಿದ್ದ ಮರ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ, ಯಾವ ಸಿಬ್ಬಂದಿ ಅಧಿಕಾರಿಗಳು ತಕ್ಷಣ ಬಂದು ಕಾರ್ಯಾಚರಣೆ ನಡೆಸಿಲ್ಲ’ ಎಂದು ಉಮ್ಮತ್ತೂರಿನ ಮುಖಂಡ ಸೋಮಣ್ಣ ಅವರು ದೂರಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ಕುಮಾರ್ ಅವರು, ‘ಬೆಂಕಿ ಬಿದ್ದ ಮಾಹಿತಿ ಸಿಕ್ಕಿದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ನಂದಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.