ADVERTISEMENT

ಚಾಮರಾಜನಗರ: ಕೋವಿಡ್‌ನಿಂದ ಒಂದು ಸಾವು, 28 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 15:57 IST
Last Updated 10 ಏಪ್ರಿಲ್ 2021, 15:57 IST
ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಹೋಗುವ ಮೆಟ್ಟಿಲುಗಳಲ್ಲಿ ಕಂಟೈನ್‌ಮೆಂಟ್‌ ಜೋನ್‌ ಎಂಬ ಫಲಕ ಹಾಕಿರುವುದು
ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಹೋಗುವ ಮೆಟ್ಟಿಲುಗಳಲ್ಲಿ ಕಂಟೈನ್‌ಮೆಂಟ್‌ ಜೋನ್‌ ಎಂಬ ಫಲಕ ಹಾಕಿರುವುದು   

ಚಾಮರಾಜನಗರ: ಎರಡು ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಸಾವು ಸಂಭವಿಸಿದೆ. ಮೈಸೂರಿನ ನಿವಾಸಿಯಾಗಿರುವ 30 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸಿದೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಅವರು ಶುಕ್ರವಾರ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 113ಕ್ಕೆ ಏರಿದೆ.20 ಮಂದಿ ಬೇರೆ ಅನಾರೋಗ್ಯಗಳಿಂದಾಗಿ ಮೃತಪಟ್ಟಿದ್ದಾರೆ.

ಶನಿವಾರ ಜಿಲ್ಲೆಯಲ್ಲಿ ಹೊಸದಾಗಿ 28 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 14 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 217ಕ್ಕೆ ಏರಿದೆ.

ADVERTISEMENT

ಜಿಲ್ಲೆಯಲ್ಲಿರುವ ಸೋಂಕಿತರ ಪೈಕಿ 166 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,315 ಪ್ರಕರಣಗಳು ದೃಢಪಟ್ಟಿವೆ. 6965 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ 903 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 877 ವರದಿಗಳು ನೆಗೆಟಿವ್‌ ಬಂದಿವೆ.

ದೇವಾಲಯದಲ್ಲಿ ಪೂಜೆ: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ರಂಗನಾಥಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‌ಮೆಂಟ್‌ ಜೋನ್‌ ಎಂದು ಘೋಷಿಸಲಾಗಿದೆ. ಎರಡು ದಿನಗಳಿಂದ ಸ್ಥಗಿತವಾಗಿ ಪೂಜೆ ಶನಿವಾರ ಮತ್ತೆ ಆರಂಭವಾಗಿದೆ. ಬೇರೆ ಅರ್ಚಕರು ಬಂದು ಪೂಜೆ ಕೈಗೊಂಡಿದ್ದಾರೆ. ದೇವಾಲಯದ ಒಳಗಡೆ ಯಾರಿಗೂ ಪ್ರವೇಶಕ್ಕೆ ಅವಕಾಶ ನೀಡಿಲ್ಲ.

ಕೋವಿಡ್‌ ಕೇರ್‌ ಕೇಂದ್ರ ಆರಂಭಿಸಲು ಪ್ರಕ್ರಿಯೆ

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ಆರಂಭಿಸಿದೆ.

ಕುಲುಮೆ ರಸ್ತೆಯ, ರಾಮಸಮುದ್ರ ಬಡಾವಣೆಯಲ್ಲಿರುವ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಕಟ್ಟಡವನ್ನು ಕೋವಿಡ್‌ ಕೇರ್‌ ಕೇಂದ್ರ ಸ್ಥಾಪಿಸಲು ಗುರುತಿಸಲಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳಿಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಕೋವಿಡ್‌ ಕೇರ್‌ ಕೇಂದ್ರಕ್ಕೆ ಸ್ಥಳ ಗುರುತಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದ್ದು, ಅದರಂತೆ ಕಟ್ಟಡವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಕೋವಿಡ್‌ ಕೇರ್‌ ಕೇಂದ್ರದ ಸ್ಥಾಪನೆಯ ಅಗತ್ಯದ ಬಗ್ಗೆ ‘ಪ್ರಜಾವಾಣಿ’ಯು ಏಪ್ರಿಲ್‌ 6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.