ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಗೆ ಬರುವ ತ್ರಿಯಂಭಕಪುರ ದಕ್ಷಿಣದ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಶನಿವಾರ ಸಂಜೆ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.
ಶನಿವಾರ ಸಂಜೆ ಅರಣ್ಯದಂಚಿನಲ್ಲಿ ಕಾಣಿಸಿಕೊಂಡ ಬೆಂಕಿ, ಹುಲ್ಲು, ಇತರೆ ಗಿಡಗಂಟೆಗಳು ಒಣಗಿ ನಿಂತಿದ್ದ ಕಾರಣ ಗಾಳಿಯ ರಭಸಕ್ಕೆ ಪೂರ್ವ-ಪಶ್ಚಿಮಾಭಿಮುಖವಾಗಿ ವ್ಯಾಪಿಸಿತ್ತು. ಬೆಂಕಿ ತನ್ನ ಕೆನ್ನಾಲಿಗೆಯನ್ನು ಚಾಚುತ್ತಿದ್ದ ದೃಶ್ಯ ತ್ರಿಯಂಭಕಪುರ ಮತ್ತು ಕಗ್ಗಳ, ಕಗ್ಗಳದಹುಂಡಿ, ತೆರಕಣಾಂಬಿ ಗ್ರಾಮಗಳಿಗೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಜನರು ಚಿತ್ರ ತೆಗೆದು, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.
ಮಾಹಿತಿ ತಿಳಿದು ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವಾಹನದ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ನೂರಾರು ಎಕರೆ ಸಂರಕ್ಷಿತ ಅರಣ್ಯ ನಾಶವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅರಣ್ಯ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ಪಕ್ಕದ ಕೃಷಿ ಜಮೀನಿನಲ್ಲಿ ಹಾಕಿದ್ದ ಬೆಂಕಿ ತೀವ್ರವಾದ ಗಾಳಿಗೆ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹರಡಿತು. ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.