ADVERTISEMENT

ಚಾಮರಾಜನಗರ | ₹950 ಕೋಟಿ ಕಬ್ಬಿನ ಬಾಕಿ ಬಿಡುಗಡೆ ಆಗ್ರಹ

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 14:44 IST
Last Updated 15 ಏಪ್ರಿಲ್ 2025, 14:44 IST
ರೈತರ ಸಮಸ್ಯೆ ಹಾಗೂ ಕಬ್ಬುಬೆಳೆಗಾರರ ಬೇಡಿಕೆಗಳ ಕುರಿತು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಚರ್ಚಿಸಿತು
ರೈತರ ಸಮಸ್ಯೆ ಹಾಗೂ ಕಬ್ಬುಬೆಳೆಗಾರರ ಬೇಡಿಕೆಗಳ ಕುರಿತು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಚರ್ಚಿಸಿತು   

ಚಾಮರಾಜನಗರ: ಸಕ್ಕರೆ ಕಾರ್ಖಾನೆಗಳು ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ನೀಡದೆ ವಂಚಿಸುತ್ತಿವೆ, ಕಳೆದ ವರ್ಷ ರೈತರಿಗೆ ಕೊಡಬೇಕಿರುವ ₹ 950 ಕೋಟಿ ಬಾಕಿ ಪಾವತಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿತು.

ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದ ಮುಖಂಡರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದ್ದು ರೈತರು ಜಮೀನಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ರಾತ್ರಿ ಹೊತ್ತು ಕಾಡುಪ್ರಾಣಿಗಳ ದಾಳಿ ಭಯದಿಂದ ಜಮೀನುಗಳಿಗೆ ತೆರಳಲಾಗುತ್ತಿಲ್ಲ. ರೈತರಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು.

ADVERTISEMENT

ಬ್ಯಾಂಕ್‌ ಹಾಗೂ ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆದಿರುವ ರೈತರಿಗೆ ನೀಡುತ್ತಿರುವ ಅನಗತ್ಯ ಕಿರುಕುಳವನ್ನು ತಪ್ಪಿಸಬೇಕು, ಕೃಷಿ ಸಾಲ ವಿತರಿಸುವಾಗ ಸಿಬಿಲ್ ಸ್ಕೋರ್‌ ಪರಿಗಣಿಸಬಾರದು, ಹೈನುಗಾರರಿಗೆ ಕೊಡಲು ಬಾಕಿ ಇರುವ 800 ಕೋಟಿ ಪ್ರೋತ್ಸಾಹಧನವನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

ಬಿತ್ತನೆ ಬೀಜ ಹಾಗೂ ರಸಗೊಬ್ಬರ ದರ ಏರಿಕೆಯಿಂದ ರೈತರಿಗೆ ಆರ್ಥಿಕ ಹೊರೆಯಾಗಿದ್ದು ದರ ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೆ ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ಸಮಯದಲ್ಲಿ ಬೆಂಬಲ ಬೆಲೆ ನೀಡಬೇಕು ಎಂದು ಸಭೆಯಲ್ಲಿ ರೈತ ಮುಖಂಡರು ಒತ್ತಾಯಿಸಿದರು.

ಸಭೆಯಲ್ಲಿ ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಜಿಲ್ಲಾ ಕಾರ್ಯದರ್ಶಿ ಮೂಕಳ್ಳಿ ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಸತೀಶ್‌, ಉಪಾಧ್ಯಕ್ಷ ಹೆಗ್ಗೋಠಾರ ಶಿವಸ್ವಾಮಿ, ಪ್ರಧಾನ ಕಾರ್ಯದರ್ಶಿ ಉಡಿಗಾಲ ಸುಂದ್ರಪ್ಪ, ಮುಖಂಡರಾದ ನವೀನ್, ಗುರುಸ್ವಾಮಿ, ಗುರುಪ್ರಸಾದ್, ಮಾದೇಶ್, ಬಸವಣ್ಣ, ಜಯಲಕ್ಷ್ಮೀ, ನಾಗಮ್ಮ, ಚಿಕ್ಕಮಾದಪ್ಪ, ಶಿವಪ್ಪ, ಮೂಕಳ್ಳಿ ಕುಮಾರ್ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.