ADVERTISEMENT

ಜಿಲ್ಲಾಡಳಿತದಿಂದ ಸರಳ ಗಾಂಧಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 14:07 IST
Last Updated 2 ಅಕ್ಟೋಬರ್ 2020, 14:07 IST
ಗಣ್ಯರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು
ಗಣ್ಯರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು   

ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನವನ್ನು ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಅಶ್ವಿನಿ, ಶಾಸಕ ಸಿ. ಪುಟ್ಟರಂಗಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯ ಸದಾಶಿವಮೂರ್ತಿ ಸೇರಿದಂತೆ ವಿವಿಧ ಧರ್ಮಗುರುಗಳು ದೀಪ ಬೆಳಗಿಸಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಲಾವಿದರಾದ ಬಸವರಾಜು, ನಟರಾಜು ಅವರು ರಘುಪತಿ ರಾಘವ ರಾಜಾರಾಮ್ ಮತ್ತು ವೈಷ್ಣವ ಜನತೋ ಗೀತೆಗಳನ್ನು ಪ್ರಸ್ತುತಪಡಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಹಾಜರಿದ್ದ ವಿವಿಧ ಧರ್ಮಗುರುಗಳು ಮಾತನಾಡಿ, ‘ಮಾನವ ಜನ್ಮ ದೊಡ್ಡದು. ಅದನ್ನು ವ್ಯರ್ಥ ಮಾಡದೇ ಸಮಾಜದಲ್ಲಿ ಸರಳತೆಯಿಂದ ಬದುಕಿ ಸರ್ವರ ಒಳಿತಿಗಾಗಿ ಶ್ರಮಿಸಬೇಕು. ಎಲ್ಲರೂ ಮಾನವೀಯತೆಯನ್ನು ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬೇಕು’ ಎಂದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ‘ಗಾಂಧೀಜಿ ಅವರ ಜಯಂತಿಯನ್ನು ಕೋವಿಡ್-19 ಕಾರಣದಿಂದ ದೇಶದೆಲ್ಲೆಡೆ ಸರಳವಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ಅವರು ಸ್ವಾತಂತ್ರ್ಯ ತಂದುಕೊಟ್ಟಿದ್ದರಿಂದ ನಾವೆಲ್ಲರೂ ಶಾಂತಿ, ಸುಸ್ಥಿರವಾದ ಜೀವನ ನಡೆಸುತ್ತಿದ್ದೇವೆ. ಅವರ ಚಿಂತನೆ, ಆದರ್ಶ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ನಿರಂತರವಾಗಿ ಸ್ಮರಿಸಬೇಕು’ ಎಂದು ಹೇಳಿದರು.

‘ಗಾಂಧೀಜಿ ರಾಮರಾಜ್ಯದ ಕನಸು ಕಂಡಿದ್ದರು. ಪ್ರತಿಯೊಬ್ಬರೂ ಅವರ ಸರಳತೆಯನ್ನು ಅನುಸರಿಸಬೇಕು. ಜನರಲ್ಲಿ ಬೆರೆಯಬೇಕು. ಅವರ ಆಶಯದಂತೆ ದೇಶ ರಾಮರಾಜ್ಯವಾಗಲು ಗ್ರಾಮಗಳ ಶ್ರೇಯೋಭಿವೃದ್ಧಿಗೆ ಪಣತೊಡಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ ಹದ್ದಣ್ಣವರ್, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶ ಎಚ್.ಕೆ. ಗಿರೀಶ್, ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.