
ಸಂತೇಮರಹಳ್ಳಿ: ಇಲಾಖೆ ನೌಕರರು ಸಂಘಟಿತರಾದಾಗ ಮಾತ್ರ ಸರ್ಕಾರದಿಂದ ದೊರಕುವ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಂತೇಮರಹಳ್ಳಿ ಸೆಸ್ಕ್ ಉಪವಿಭಾಗದ ಪ್ರಾಥಮಿಕ ಸಮಿತಿ ಅಧ್ಯಕ್ಷ ಜೆ.ಎಂ.ಮರಿಸ್ವಾಮಿ ಅಭಿಪ್ರಾಯಪಟ್ಟರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಪ್ರಾಥಮಿಕ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಇಲಾಖೆ ನೌಕರರು ತಮ್ಮ ಸಮಸ್ಯೆಗಳನ್ನು ಸರ್ಕಾರದ ಮಟ್ಟಕ್ಕೆ ತಿಳಿಸಲು ಸಾಧ್ಯವಾಗುತ್ತಿರಲಿಲ್ಲ. ಈಗ ರಾಜ್ಯ ವ್ಯಾಪ್ತಿಯಲ್ಲಿ ಸಂಘಟಿತರಾಗಲು ಮುಂದಾಗುತ್ತಿರುವುದರಿಂದ ಸರ್ಕಾರದ ಮಟ್ಟದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ನಮ್ಮ ಉಪ ವಿಭಾಗ ವ್ಯಾಪ್ತಿಯಲ್ಲಿ 2 ನೌಕರರು ಮೃತಪಟ್ಟಿರುವುದು ನೋವುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ನೌಕರರು ಕೆಲಸ ಮಾಡುವ ವೇಳೆಯಲ್ಲಿ ತಮ್ಮ ಆರೋಗ್ಯ ಹಿತದೃಷ್ಟಿ ಹಾಗೂ ಜಾಗೃತಿಯಿಂದ ಕೆಲಸ ನಿರ್ವಹಿಸಬೇಕು. ನೌಕರರು ಕಚೇರಿಯಲ್ಲಿರುವ ಅಧಿಕಾರಿಗಳ ಜೊತೆ ಪ್ರೀತಿ ವಿಶ್ವಾಸದಿಂದ ಕೆಲಸ ನಿರ್ವಹಿಸಬೇಕು. ಸಮಿತಿ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಸಮಿತಿ ವತಿಯಿಂದ ರೋಟರಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಫೆಬ್ರುವರಿ ಮೊದಲ ವಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗುತ್ತದೆ. ಯಶಸ್ವಿಯಾಗಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಂತೇಮರಹಳ್ಳಿ ಸೆಸ್ಕ್ ಉಪವಿಭಾಗ ಪ್ರಾಥಮಿಕ ಸಮಿತಿ ಕಾರ್ಯದರ್ಶಿ ಸತೀಶ್, ಖಜಾಂಚಿ ದೊರೆಸ್ವಾಮಿ, ನಿರ್ದೇಶಕರಾದ ಗಿರೀಶ್, ದೊರೆ, ಮಹೇಶ್, ಚಿನ್ನಸ್ವಾಮಿ ಸೇರಿದಂತೆ ಇಲಾಖೆ ನೌಕರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.