
ಮಲೆ ಮಹದೇಶ್ವರ ಸ್ವಾಮಿ ದೇವಾಲಯ
ಮಹದೇಶ್ವರ ಬೆಟ್ಟ: ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರಿಗೆ ಸರ್ಕಾರ ನೀಡಿರುವ ಕಾರನ್ನು ಅಧಿಕಾರಿಯ ಕುಟುಂಬದವರು ಮಲೆ ಮಹದೇಶ್ವರ ದೇವಸ್ಥಾನ ಹಾಗೂ ಹೊಗೇನಕಲ್ ಜಲಪಾತ ವೀಕ್ಷಣೆಗೆ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ರಜಾ ದಿನವಿದ್ದರೂ ಅಧಿಕಾರಿಯ ಕುಟುಂಬ ಸದಸ್ಯರು ಸರ್ಕಾರಿ ಕಾರನ್ನು ಬಳಸಿಕೊಂಡು ದೇವಸ್ಥಾನ ಹಾಗೂ ಜಲಪಾತ ವೀಕ್ಷಣೆಗೆ ಬಂದಿರುವುದು ಸರಿಯಲ್ಲ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಾಹನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದೆ.
ಅರಣ್ಯ ಇಲಾಖೆಗೆ ಸೇರಿದ ಕೆಎ 09–ಜಿ 0771 ಸಂಖ್ಯೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಾಹನದ ವಿಮೆಯ ಅವಧಿಯೂ ಮುಗಿದಿರುವುದು ಇ ದಾಖಲೆಗಳಿಂದ ತಿಳಿದು ಬಂದಿದೆ. ವಾಹನ ದುರ್ಬಳಕೆ ಮಾಡಿಕೊಂಡ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕರುನಾಡ ವಿಜಯಸೇನೆ ಉಪಾಧ್ಯಕ್ಷ ಚಂದ್ರಶೇಖರ್ ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯೆ ಪಡೆಯಲು ಮೈಸೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕರಿಗೆ ಕರೆ ಮಾಡಲಾಯಿತಾದರೂ ಕರೆ ಸ್ವೀಕರಿಸಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.