ADVERTISEMENT

ಚಾಮರಾಜನಗರದಲ್ಲೂ ಕಾರ್ಯಕರ್ತರ ಸರಣಿ ಸಭೆ

ಜಿಲ್ಲೆಯಲ್ಲಿ ಮುಂದುವರಿದ ಜಿಲ್ಲಾ ಉಸ್ತುವಾರಿ ಸಚಿವರ ಪಕ್ಷ ಸಂಘಟನೆ ಕಾರ್ಯ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 15:48 IST
Last Updated 16 ಡಿಸೆಂಬರ್ 2020, 15:48 IST
ಪುಟ್ಟನಪುರಗ್ರಾಮದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಮಾತನಾಡಿದರು
ಪುಟ್ಟನಪುರಗ್ರಾಮದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಮಾತನಾಡಿದರು   

ಚಾಮರಾಜನಗರ: ಗ್ರಾಮ ಪಂಚಾಯಿತಿ ಚುನಾವಣೆಗೂ ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕಾರ್ಯವನ್ನು ಬುಧವಾರವೂ ಮುಂದುವರಿಸಿದ್ದು, ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆಗಳನ್ನು ನಡೆಸಿದರು.

ಚಂದಕವಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಪುಟ್ಟನಪುರಗ್ರಾಮದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಯಾಗಿದ್ದು, ಗ್ರಾಮಪಂಚಾಯಿತಿಯಲ್ಲಿ ಕೆಲಸ ಮಾಡಿದ ತೃಪ್ತಿ ಬೇರೆ ಯಾವುದರಲ್ಲೂ ಸಿಗುವುದಿಲ್ಲ’ ಎಂದು ಹೇಳಿದರು.

‘ಗ್ರಾಮಗಳಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡುವ ಸದಾವಕಾಶವಿದೆ, ಇದರಿಂದ ಗ್ರಾಮಗಳನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು’ ಎಂದರು.

ADVERTISEMENT

‘ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಪಕ್ಷದ ಬಗ್ಗೆ ಒಲವಿರುವ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು, ಎಲ್ಲ ಪಂಚಾಯಿತಿಗಳಲ್ಲೂ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ’ ಎಂದರು.‌

ಚಂದಕವಾಡಿ ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಬಾಲರಾಜು ಅವರು ಮಾತನಾಡಿ, ದೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ವೇಳೆ ಐದು ವರ್ಷ ಉತ್ತಮ ಆಡಳಿತ ನೀಡಿದರು. ನರೇಂದ್ರಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ವಿಶ್ವದ ಗಮನಸೆಳೆದಿದ್ದಾರೆ. ಕಟ್ಟ ಕಡೆಯ ಮನುಷ್ಯನ ಅಭಿವೃದ್ಧಿ ದೃಷ್ಟಿಯಿರಿಸಿಕೊಂಡ ಪ್ರಧಾನಿ ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ್ ಸೇರಿದಂತೆ ಹಲವಾರು ಜನಪರ ಯೋಜನೆ ನೀಡಿದ್ದಾರೆ. ರಾಜ್ಯದಲ್ಲೂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಬದನಗುಪ್ಪೆ, ಮಾದಾಪುರ, ಉಡಿಗಾಲ, ಹರದನಹಳ್ಳಿ, ಅಮಚವಾಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುರೇಶ್‌ ಕುಮಾರ್‌ ನೇತೃತ್ವದಲ್ಲಿ ಸಭೆಗಳು ನಡೆದವು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಮುಖಂಡ ಕೆ.ಆರ್.ಮಲ್ಲಿಕಾರ್ಜುನಪ್ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಎನ್.ಜಿ.ಪ್ರಶಾಂತ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್.ಬಾಲರಾಜು, ಮುಖಂಡ ಅಯ್ಯನಪುರ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಪಿ.ಎನ್.ದಯಾನಿಧಿ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಬಸವಣ್ಣ(ಸುಂದ್ರಪ್ಪ), ಸಹಸಂಚಾಲಕ ಪೃಥ್ವಿರಾಜ್, ಕಾರ್ಯದರ್ಶಿ ಚಂದ್ರು, ಮುಖಂಡರಾದ ಕೋಡಿಮೋಳೆ ರಾಜಶೇಖರ್, ವಿಜಯೇಂದ್ರ, ಹನುಮಂತಶೆಟ್ಟಿ, ಎ.ಆರ್.ಬಾಲು, ನಿಜಗುಣರಾಜು, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.