
ಗುಂಡ್ಲುಪೇಟೆ: ಎಐ ತಂತ್ರಜ್ಞಾನ ಬಳಸಿ ಹುಲಿಯ ಇರುವಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಿಬಿಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಕಟಣೆ ತಿಳಿಸಿದೆ.
ಬಂಡೀಪುರ ಹುಲಿ ಸಂರಕ್ಷಿತ ಪುದೇಶದ ವಿವಿಧ ವಲಯಗಳ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸತತ ಕಾರ್ಯಚರಣೆ ನಡೆಸಿ, ಹೆಡಿಯಾಲ ಉಪ-ವಿಭಾಗ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ 5 ಹುಲಿಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ . ಬಳಿಕ ಬಂದ ಜಾಲತಾಣ ಮಾಹಿತಿಗಳನ್ನು ಆಧರಿಸಿ ಸ್ಥಳಕ್ಕೆ ತೆರಳಿ ಸಿಬ್ಬಂದಿ ತಂಡ ಪರಿಶೀಲನೆ ನಡೆಸಿದರೂ ಹುಲಿಯ ಕುರುಹುಗಳು ಪತ್ತೆಯಾಗಿರುವುದಿಲ್ಲ. ಹೀಗಿದ್ದರೂ ಎಐ ತಂತ್ರಜ್ಞಾನ ಬಳಸಿ ಹುಲಿಯ ಇರುವಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಅಧಿಕಾರಿಗಳು ಆಕ್ಷೇಪಿಸಿದ್ದಾರೆ.
‘ ಸುಳ್ಳುಮಾಹಿತಿಯಿಂದ ಭಯಬೀತರಾಗುವ ರೈತರು ಹೊಲ ಗದ್ದೆ, ಮನೆಗಳಿಗೆ ತೆರಳಲು ಹಿಂಜರಿಯುತ್ತಿದ್ದಾರೆ. ಇಲಾಖೆಯ ಸಿಬ್ಬಂದಿಗೂ ಸಮರ್ಪಕವಾಗಿ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ. ಸುಳ್ಳು ಸಂದೇಶ ಕಳುಹಿಸುವ ಮತ್ತು ಹಂಚಿಕೊಳ್ಳುವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು. ಸುಳ್ಳು ಮಾಹಿತಿ ಹಂಚಿಕೊಳ್ಳಬಾರರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.